ಬಿಬಿಎಂಪಿ
ಬೆಂಗಳೂರು: ಪಶ್ಚಿಮ ವಲಯದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ನಡೆದಿರುವ ಮನೆಗಳಿಗೆ ಸ್ಟಿಕ್ಕರ್ ಅಂಟಿಸಬೇಕು ಎಂದು ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಪೂರ್ಣಗೊಳಿಸಲಾಗಿರುವ ಎಲ್ಲ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸರ್ವೆ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದು. ಸ್ಟಿಕ್ಕರ್ ಅಂಟಿಸುವ ವೇಳೆ ಸಮೀಕ್ಷೆ ಆಗಿದೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಅದಕ್ಕಾಗಿ ಎನ್ಎಸ್ಎಸ್, ಎನ್ಸಿಸಿ, ನೋಂದಾಯಿತ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಲು ತಿಳಿಸಿದರು.
ಬೆಸ್ಕಾಂ, ಜಲಮಂಡಳಿಯ ದತ್ತಾಂಶ ಆಧಾರದ ಮೇಲೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಬಾಕಿ ಸಮೀಕ್ಷೆ ಮಾಡಬೇಕಿರುವುದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯ 27 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಜೂನ್ 14ರವರೆಗೆ 1,77,718 ಪರಿಶಿಷ್ಟ ಜಾತಿಯವರ ಮನೆ ಹಾಗೂ 32,02,449 ಇತರರ ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.