ಬೆಂಗಳೂರು: ‘ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ನಡೆದಿರುವ ಅವ್ಯವಹಾರಗಳ ಆರೋಪಗಳ ಬಗ್ಗೆ ಸಮೀಕ್ಷೆ ಆರಂಭಿಸಿದ್ದು, ಮೂರು ತಿಂಗಳ ಒಳಗೆ ವರದಿ ಸಲ್ಲಿಸಲಾಗುವುದು’ ಎಂದು ವಿಧಾನ ಮಂಡಲದ ಜಂಟಿ ಸದನ ಸಮಿತಿಯ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದರು.
ಬುಧವಾರ ನಡೆದ ಸಮಿತಿಯ ಮೊದಲ ಸಭೆಯ ಬಳಿಕ ಮಾತನಾಡಿದ ಅವರು, ‘ಈ ಅವ್ಯವಹಾರದ ಬಗ್ಗೆ ಸಮಗ್ರವಾಗಿ ವಿಚಾರಣೆ ನಡೆಸಿ ವರದಿ ನೀಡಲಾಗುವುದು’ ಎಂದರು.
‘ಟೆಂಡರ್ ಪ್ರಕ್ರಿಯೆ, ಹೆಚ್ಚುವರಿ ಮೊತ್ತ ಪಾವತಿ, ಘಟಕಗಳ ಗುಣಮಟ್ಟದ ಬಗ್ಗೆ ಸಮಿತಿ ವಿಚಾರಣೆ ನಡೆಸಲಿದೆ. ಹಲವು ಕಡೆಗಳಲ್ಲಿ ಅಳವಡಿಸಿರುವ ಘಟಕಗಳು ಯೋಗ್ಯವಾಗಿಲ್ಲ. ಘಟಕಗಳ ಅಳವಡಿಕೆಯಲ್ಲಿ ಮಧ್ಯವರ್ತಿಗಳು ಭಾಗಿಯಾಗಿದ್ದು, ಭಾರಿ ಪ್ರಮಾಣ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೇ ಕಾಣಿಸುತ್ತದೆ’ ಎಂದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಶಾಸಕರು ಧ್ವನಿ ಎತ್ತಿದಾಗ (2020 ಡಿಸೆಂಬರ್), ಈ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆಯಲ್ಲಿ ನಡೆದ ಅವ್ಯವಹಾರ ಆರೋಪದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.