ವಿಧಾನಸೌಧ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾದ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಇದೇ 21ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ‘ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ–2013 (ಎಸ್ಸಿಎಸ್ಪಿ ಟಿಎಸ್ಪಿ) ಕಾಯ್ದೆಯನ್ನು ಪರಿಶಿಷ್ಟರ ಕಲ್ಯಾಣಕ್ಕೆ ಜಾರಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಇದು ಸಹಕಾರಿಯಾಗಿದೆ. ಈ ಕಾಯ್ದೆಯ ಸೆಕ್ಷನ್ 7ಸಿ ಅನ್ನು ಕೂಡಲೇ ರದ್ದುಗೊಳಿಸುವ ಮೂಲಕ, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಹಣವು ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಬಳಕೆಯಾಗುವುದನ್ನು ತಡೆಯಬೇಕು’ ಎಂದು ಆಗ್ರಹಿಸಿದರು.
‘2024–25 ಹಾಗೂ 2025–26ನೇ ಸಾಲಿಗೆ ‘ಗ್ಯಾರಂಟಿ’ ಸೇರಿ ವಿವಿಧ ಯೋಜನೆಗಳಿಗೆ ಎಸ್ಸಿಎಸ್ಪಿ ಟಿಎಸ್ಪಿ ಹಣವನ್ನು ಉಪಯೋಗಿಸಲಾಗಿದೆ. ಪರಿಶಿಷ್ಟರ ಅಭಿವೃದ್ಧಿಯ ಅವಕಾಶವನ್ನು ಸರ್ಕಾರ ತಪ್ಪಿಸುತ್ತಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ, ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ರಾಜ್ಯ ಸರ್ಕಾರವು ದತ್ತಾಂಶಗಳ ಅನುಸಾರ ಯಾವುದೇ ಜಾತಿಗೆ ಅನ್ಯಾಯವಾಗದಂತೆ ಮೀಸಲಾತಿ ಹಂಚಿಕೆ ಮಾಡಿ, ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.