ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ಪ್ರಕಟಿಸಿದ ₹20 ಲಕ್ಷ ಕೋಟಿ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು. ಬಡವರು, ಶ್ರಮಿಕರ ಬಗ್ಗೆ ಪ್ರಸ್ತಾಪವೇ ಇಲ್ಲದ ಪ್ಯಾಕೇಜ್ ಬೆತ್ತಲೆ ಮನುಷ್ಯನ ಮುಂದೆ ಅರಸನ ಮೆರವಣಿಗೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಟಿವಿ ಪರದೆಯಲ್ಲಿ, ಪತ್ರಿಕೆಗಳ ಪುಟಗಳಲ್ಲಿ ಮಾತ್ರ ಪ್ಯಾಕೇಜ್ ಕಾಣುತ್ತಿದೆ. ಜನರ ಕೈಗೆ ಸಿಗುತ್ತಿಲ್ಲ. ಪ್ಯಾಕೇಜ್ ಕೇವಲ ಅಂಕಿ–ಅಂಶಗಳ ಕಸರತ್ತು ಎಂದು ಹೇಳಿದ್ದಾರೆ.
ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಆರ್ಥಿಕ ತಜ್ಞರು ಹೇಳುತ್ತಲೇ ಇದ್ದಾರೆ. ಆದರೆ, ಮೋದಿ ಖಾಲಿಯಾಗಿರುವ ಸರ್ಕಾರದ ಖಜಾನೆ ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ದಕ್ಕಿದ್ದೆಷ್ಟು? ಅವರಿಗಾದ ಲಾಭ ಎಷ್ಟು ಎಂಬ ವಿವರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಿರುವ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎನಿಸಿದರೂ ಒಳಗುಟ್ಟು ಬೇರೆಯೇ ಇದೆ. ದೇಶದಲ್ಲಿ 6.2 ಲಕ್ಷ ಕೋಟಿ ಕಿರು ಉದ್ದಿಮೆಗಳಿವೆ. ಅವುಗಳಲ್ಲಿ 45 ಲಕ್ಷ ದೊಡ್ಡ ಗಾತ್ರದ ಕಿರು ಉದ್ದಿಮೆಗಳಿಗೆ ಈ ನೆರವು ಸಿಗುತ್ತದೆ ಎಂದಿದ್ದಾರೆ.
‘ಆರ್ಥಿಕ ಸುಧಾರಣೆಗೆ ಒತ್ತು’
ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮನಿರ್ಭರ್ ಭಾರತ್’ ಪ್ಯಾಕೇಜ್ನ 5ನೇ ದಿನದ ಘೋಷಣೆಗಳಲ್ಲಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕಾ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯಗಳ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು ಕೇಂದ್ರ ಸರ್ಕಾರದ ಆಶಯ ಸಾಕಾರಗೊಳಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲೂ ಶ್ರಮಿಸಲಿದೆ ಎಂದಿದ್ದಾರೆ. ‘ಟಿ.ವಿ. ಚಾನೆಲ್ಗಳನ್ನು ಪ್ರಾರಂಭ ಮಾಡಿ ಮಕ್ಕಳಿಗೆ ಪಾಠ ಹೇಳುವುದು ಒಂದು ಒಳ್ಳೆಯ ನಿರ್ಧಾರ. ಇದರಿಂದ ಶಾಲಾ ದಿನಗಳನ್ನು ಕಳೆದುಕೊಂಡ ಮಕ್ಕಳಿಗೆ ಅನುಕೂಲವಾಗಲಿದೆ. ಪ್ರಧಾನಮಂತ್ರಿ ಇ-ವಿದ್ಯಾ ಯೋಜನೆ ಔಪಚಾರಿಕ ಪದ್ಧತಿಯ ವಿದ್ಯಾರ್ಜನೆಯ ಮೇಲಿನ ಒತ್ತಡ ಕಡಿಮೆ ಮಾಡುತ್ತದೆ. ಇ-ಎಜುಕೇಷನ್ ಯೋಜನೆ ದೇಶದ ವಿದ್ಯಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.