ಬೆಂಗಳೂರು: ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಡಿಪ್ಲೊಮಾ ಕೋರ್ಸ್ ಪಠ್ಯಕ್ರಮವನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ಶುಕ್ರವಾರ ವಿಧಾನ ಪರಿಷತ್ನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರತಿವರ್ಷ 40,000 ವಿದ್ಯಾರ್ಥಿಗಳು ಡಿಪ್ಲೊಮಾ ಕೋರ್ಸ್ ಮುಗಿಸುತ್ತಿದ್ದಾರೆ. ಶೇ 20ರಷ್ಟು ಮಂದಿಗೂ ಸರಿಯಾದ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗ ಮಾರುಕಟ್ಟೆಯ ಬೇಡಿಕೆ ಮತ್ತು ಡಿಪ್ಲೊಮಾ ಪಠ್ಯಕ್ರಮದ ನಡುವಿನ ಅಂತರ ನಿವಾರಿಸಲು ಹೊಸ ಪಠ್ಯಕ್ರಮ ಜಾರಿಗೆ ತರಲಾಗುವುದು‘ ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಡಿಪ್ಲೊಮಾ ಕೋರ್ಸ್ ಪಠ್ಯಕ್ರಮದ ಬದಲಾವಣೆಗೆ ಪೂರಕವಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಹೆಚ್ಚಿನ ಆರ್ಥಿಕ ಹೊರೆ ಬೀಳುವುದಿಲ್ಲ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಪೂರಕವಾಗಿ ಮೂರು ಹೊಸ ಕಾಯ್ದೆಗಳನ್ನು ತರಲಾಗುವುದು. ‘ಕರ್ನಾಟಕ ಕಲಿಕಾ ನಿರ್ವಹಣಾ ವ್ಯವಸ್ಥೆ‘ ಈಗಾಗಲೇ ಜಾರಿಗೆ ಬಂದಿದೆ. ಉನ್ನತ ಶಿಕ್ಷಣ ಪರಿಷತ್ ಮಾದರಿಯಲ್ಲಿ ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆಯ ಪ್ರಸ್ತಾವಕ್ಕೂ ಎಲ್ಲ ಸದಸ್ಯರು ಬೆಂಬಲಿಸಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಮರಿತಿಬ್ಬೇಗೌಡ, ವೈ.ಎ. ನಾರಾಯಣಸ್ವಾಮಿ, ಅ. ದೇವೇಗೌಡ, ಎಸ್.ಎಲ್. ಭೋಜೇಗೌಡ, ಚಿದಾನಂದ ಗೌಡ, ಅರುಣ್ ಶಹಾಪುರ, ಶಶೀಲ್ ಜಿ. ನಮೋಶಿ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಸಭೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.