ಬೆಂಗಳೂರು: ಸುಮನಹಳ್ಳಿ ನಿರಾಶ್ರಿತರ ಕೇಂದ್ರದಲ್ಲಿ ಮಹಿಳಾ ನೌಕರರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ, ಅದೇ ಕೇಂದ್ರದ ಅಧಿಕಾರಿ ಚಂದ್ರಪ್ಪ (52) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಕೇಂದ್ರದಲ್ಲಿ ನೌಕರಿ ಮಾಡುತ್ತಿರುವ ಮಹಿಳೆ ದೂರು ನೀಡಿದ್ದರು. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮಹಿಳೆ ಕೆಲಸ ಮಾಡುವ ಸ್ಥಳಕ್ಕೆ ಹೋಗುತ್ತಿದ್ದ ಚಂದ್ರಪ್ಪ, ಅಲ್ಲಿದ್ದವರನ್ನು ಹೊರಗೆ ಕಳುಹಿಸುತ್ತಿದ್ದರು. ಮಹಿಳೆಯನ್ನು ಮಾತ್ರ ಕೊಠಡಿಯಲ್ಲಿ ಇರಿಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದರು. ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗುತ್ತಿದ್ದರು. ‘ನನ್ನ ಜೊತೆ ಮಲಗು’ ಎಂದು ಮಹಿಳೆಯನ್ನು ಪೀಡಿಸುತ್ತಿದ್ದರು. ತನ್ನ ಜೊತೆ ಸಹಕರಿಸದಿದ್ದರೆ ಜೀವ ಸಹಿತ ಬಿಡುವುದಿಲ್ಲವೆಂದು ಬೆದರಿಸಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ತಿಳಿಸಿವೆ.
‘ಆರೋಪಿ ಕೃತ್ಯದಿಂದ ನೊಂದ ಮಹಿಳೆ, ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ವಿಚಾರಣೆಯಿಂದಲೇ ನಿಖರ ಮಾಹಿತಿ ತಿಳಿಯಲಿದೆ’ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.