ಬೆಂಗಳೂರು: ಭಾರತೀಯ ಭಾಷಾ ಸಂಸ್ಥಾನವನ್ನು (ಸಿಐಐಎಲ್) ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ (ಬಿಬಿವಿ) ಪರಿವರ್ತಿಸಲು ಮುಂದಾಗಿರುವ ಕೇಂದ್ರ ಶಿಕ್ಷಣ ಸಚಿವಾಲಯದ ನಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
‘ಶಾಸ್ತ್ರೀಯ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬಿಬಿವಿ ವ್ಯಾಪ್ತಿಗೆ ಸೇರಿಸಲು ಹೊರಟಿರುವ ಕೇಂದ್ರ ಸರ್ಕಾರದ ನಿಲುವು ಖಂಡನೀಯ. ಸ್ವಾಯತ್ತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸಬೇಕಾದ ಈ ಶಾಸ್ತ್ರೀಯ ಭಾಷಾ ಕೇಂದ್ರಗಳನ್ನು ವಿಶ್ವವಿದ್ಯಾಲಯದ ಕೇವಲ ಒಂದು ವಿಭಾಗದ ಮಟ್ಟಕ್ಕೆ ಇಳಿಸುವುದು ಸರಿಯಲ್ಲ. ಸರ್ಕಾರವು ಈ ಮೂಲಕ ಅವುಗಳ ಅಸ್ತಿತ್ವವನ್ನೇ ನಿಷ್ಕ್ರಿಯಗೊಳಿಸಲು ಮುಂದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಹಿಂದಿಯೇತರ ಪ್ರಾದೇಶಿಕ ಭಾಷೆಗಳ ಮೇಲೆ ಕೇಂದ್ರ ಸರ್ಕಾರ ತೋರುತ್ತಿರುವ ದಮನ ನೀತಿಯ ಮುಂದುವರಿದ ಭಾಗವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ವಿರೋಧಿಸುವುದು ನಮ್ಮ ಹೊಣೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.