ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ನಗರದ ನಿವೃತ್ತ ನೌಕರರೊಬ್ಬರಿಂದ ₹ 33.79 ಲಕ್ಷ ಪಡೆದು ವಂಚಿಸಲಾಗಿದೆ.
ದೇವನಹಳ್ಳಿ ಬಳಿಯ ಸಾದಹಳ್ಳಿ ನಿವಾಸಿಯಾಗಿರುವ 72 ವರ್ಷದ ನಿವೃತ್ತ ನೌಕರರೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಾವು ಷೇರು ಮಾರುಕಟ್ಟೆ ವ್ಯವಹಾರ ಮಾಡುತ್ತೇವೆ. ನೀವು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲೇ ದ್ವಿಗುಣ ಮಾಡಿಕೊಡುತ್ತೇವೆ’ ಎಂದಿದ್ದರು. ಅವರ ಮಾತು ನಂಬಿದ್ದ ದೂರುದಾರ, ಆರೋಪಿಗಳ ಖಾತೆಗಳಿಗೆ ಹಂತ ಹಂತವಾಗಿ ₹ 33.79 ಲಕ್ಷ ಜಮೆ ಮಾಡಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.
‘ಹಣ ಪಡೆದ ನಂತರ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.