ADVERTISEMENT

ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿ ಸಭೆ

ಶಿವರಾಮ ಕಾರಂತ ಬಡಾವಣೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 5:48 IST
Last Updated 9 ಡಿಸೆಂಬರ್ 2020, 5:48 IST

ಬೆಂಗಳೂರು: ‘ಡಾ.ಕೆ.ಶಿವರಾಮ ಕಾರಂತ ಬಡಾವಣೆಗಾಗಿ ಗುರುತಿಸಲಾದ ಜಾಗದಲ್ಲಿ ಕಾನೂನುಬದ್ಧವಾಗಿ ನಿರ್ಮಾಣವಾಗಿರುವ ಕಟ್ಟಡಗಳು ಮತ್ತು ವಾಸದ ಮನೆಗಳನ್ನು ಗುರುತಿಸುವ ಸಲುವಾಗಿ ಸುಪ್ರೀಂ ಕೋರ್ಟ್‌ ನೇಮಿಸಿರುವಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದಲ್ಲಿ ಸಮಿತಿಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿತು.

ಈ ಬಡಾವಣೆ ಅಭಿವೃದ್ಧಿಗಾಗಿ ಬಿಡಿಎ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಬಡಾವಣೆಗೆ ಗೊತ್ತುಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಕ್ಷೆಗೆ ಅನುಮೋದನೆ ನೀಡಿರುವ ಬಗ್ಗೆ ಚಂದ್ರಶೇಖರ್‌ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಮಿತಿಯ ಕಾರ್ಯ ನಿರ್ವಹಣೆಗೆ ಕಚೇರಿಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ‘ಬಿಡಿಎ ಕೇಂದ್ರ ಕಚೇರಿ ಆವರಣದಲ್ಲೇ ಕಚೇರಿಯನ್ನು ಹಾಗೂ ಸಿಬ್ಬಂದಿಯನ್ನು ಒದಗಿಸುವುದಾಗಿ’ ಬಿಡಿಎ ಆಯುಕ್ತ ಎಚ್‌.ಆರ್‌.ಮಹದೇವ್ ತಿಳಿಸಿದರು.

ADVERTISEMENT

ಈ ಬಡಾವಣೆಗಾಗಿ ಸ್ವಾಧೀನ ಪಡಿಸಿಕೊಳ್ಳಬೇಕಿದ್ದ ಒಟ್ಟು 3,546 ಎಕರೆ ಭೂಮಿಯಲ್ಲಿ 257 ಎಕರೆಯನ್ನು2009–10ರ ಅವಧಿಯಲ್ಲಿ ರಾಜ್ಯ ಸರ್ಕಾರ ಕೈಬಿಡುವ ಮೂಲಕ ಭೂಮಾಲೀಕರಿಗೆ ಅನುಕೂಲ ಕಲ್ಪಿಸಿತ್ತು. ಈ ಕುರಿತು ಸಲ್ಲಿಕೆಯಾದ ಅರ್ಜಿ ವಿಲೇವಾರಿ ಮಾಡಿದ್ದ ಹೈಕೋರ್ಟ್‌ ಈ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆಯನ್ನೇ ರದ್ದುಪಡಿಸಿತ್ತು. ಬಳಿಕ ಅನೇಕರುಬಿಡಿಎ ನಿರಾಕ್ಷೇಪಣಾ ಪತ್ರ ಪಡೆದು ಈ ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದರು.

ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆಯನ್ನೇ ರದ್ದು ಮಾಡಿರುವ ಕುರಿತ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಈ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಾಗೂ ಬಿಡಿಎಗೆ 2018ರ ಆಗಸ್ಟ್‌ 3ರಂದು ನಿರ್ದೇಶನ ನೀಡಿತ್ತು.

2020ರ ಡಿ 3ರಂದು ತನ್ನ ಹಿಂದಿನ ಆದೇಶದಲ್ಲಿ ಮಾರ್ಪಾಡು ಮಾಡಿದ್ದ ಸುಪ್ರೀಂ ಕೋರ್ಟ್‌ ‘ನಿಯಮಾನುಸಾರ ಅನುಮತಿ ಪಡೆದು ನಿರ್ಮಾಣವಾಗಿರುವ ಕಟ್ಟಡಗಳಿಗೆ ರಕ್ಷಣೆ ಒದಗಿಸಬೇಕು. ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಾನೂನುಬದ್ಧ ಕಟ್ಟಡಗಳನ್ನು ಕೆಡವಬಾರದು’ ಎಂದು ಅಭಿಪ್ರಾಯಪಟ್ಟಿತ್ತು. ಈ ಸಲುವಾಗಿ ನಿವೃತ್ತ ನ್ಯಾ.ಚಂದ್ರಶೇಖರ್ ನೇತೃತ್ವದಲ್ಲಿ ಸಮಿತಿಯನ್ನೂ ರಚಿಸಿತ್ತು. ಬಿಡಿಎಯಲ್ಲಿ ಈ ಹಿಂದೆ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್‌ ಅಧಿಕಾರಿ (ನಿವೃತ್ತ) ಜೈಕರ್‌ ಜೆರೋಮ್‌ ಹಾಗೂ ನಿವೃತ್ತ ಪೊಲೀಸ್‌ ಮಹಾ ನಿರ್ದೇಶನ ಎಸ್‌.ಟಿ.ರಮೇಶ್‌ ಸಮಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.