ADVERTISEMENT

ರಣರಂಗ ಬಿಟ್ಟು ಓಡುವ ಹೇಡಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣದಲ್ಲಿ ಸರಣಿ ‘ಪೋಸ್ಟ್‌’ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 23:30 IST
Last Updated 20 ಫೆಬ್ರುವರಿ 2026, 23:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಉಸಿರು ಇರುವವರೆಗೆ ರಾಜಕೀಯ ಷಡ್ಯಂತ್ರ, ದ್ವೇಷ–ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ಆಗಲಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಸರಣಿ ‘ಪೋಸ್ಟ್‌’ಗಳನ್ನು ಶುಕ್ರವಾರ ಅವರು ಹಂಚಿಕೊಂಡಿದ್ದಾರೆ.

‘ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು’ ಎಂದಿದ್ದಾರೆ.

ADVERTISEMENT

‘ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಯಾವಾಗ ರಾಹುಲ್ ಗಾಂಧಿ ಅವರು ಜಾತಿ, ಮತ, ಪಂಥ, ವರ್ಗವನ್ನು ಮೀರಿ ಎಲ್ಲ ಭಾರತೀಯರನ್ನು ಜೋಡಿಸುವ, ಸಾಮಾಜಿಕ ನ್ಯಾಯ, ಜಾತಿಗಣತಿ ಬಗ್ಗೆ, ಮೀಸಲಾತಿ ಹೆಚ್ಚಳದ ಬಗ್ಗೆ ಧ್ವನಿ ಎತ್ತಲು ಪ್ರಾರಂಭಿಸಿದರೋ ಅಂದಿನಿಂದ ಅವರನ್ನು ಹಣಿಯುವ ಕೆಲಸ ಜೋರಾಗಿ ನಡೆಯುತ್ತಿದೆ’ ಎಂದು ಹೇಳಿದ್ದಾರೆ. 

‘ಕೋಮುವಾದವು ಸಾಮಾಜಿಕ ಅನ್ಯಾಯದ ರಾಜಕೀಯ ಮಾದರಿ. ಜನರಿಗೆ ತಲ್ವಾರ್-ಕತ್ತಿ-ತ್ರಿಶೂಲ ಹಂಚುವುದು, ದೇವಸ್ಥಾನ, ಮಸೀದಿ, ಚರ್ಚ್‌ಗಳ ಮೇಲೆ ದಾಳಿ ಮಾಡುವುದು, ಪ್ರಜೆಗಳ ಊಟದ ತಟ್ಟೆಯಲ್ಲಿ, ಮನೆಯ ಫ್ರಿಜ್‌ಗಳಲ್ಲಿ ಆಹಾರ ಏನಿದೆ ಎಂದು ಇಣುಕಿ ನೋಡಿ ಹಲ್ಲೆ ನಡೆಸುವುದು, ಜಾತಿ-ಧರ್ಮದ ಹೆಸರಲ್ಲಿ ದ್ವೇಷ, ಅಸೂಯೆ, ಹಿಂಸೆಯನ್ನು ಹರಡುವುದು ಸಂವಿಧಾನ ವಿರೋಧಿ, ಕಾನೂನು ವಿರೋಧಿ ಮತ್ತು ಜನವಿರೋಧಿಯಾದುದು. ಇದು ‘ಸಾಮಾಜಿಕ ಅನ್ಯಾಯ’ದ ರಾಜಕೀಯ ಮಾದರಿ. ವಿಪರ್ಯಾಸದ ಸಂಗತಿಯೆಂದರೆ ಈ ರೀತಿ ದ್ವೇಷ ಹಂಚುವುದರಲ್ಲಿ ನಿರತರಾಗಿರುವ ಮತ್ತು ಜಾತಿ ಧರ್ಮಗಳ ನಡುವೆ ಕಲಹ ಹುಟ್ಟಿಸುತ್ತಿರುವ ಪಕ್ಷ–ಸಂಘಟನೆಗಳೆಲ್ಲ ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿವೆ’ ಎಂದು ಕುಟುಕಿದ್ದಾರೆ.

‘ನನ್ನ ಮುಗಿಸಲು ಕುಟಿಲ ಕಾರಸ್ತಾನ’

‘ಸಾಮಾಜಿಕ ನ್ಯಾಯಕ್ಕಾಗಿ ಉಸಿರಿರುವವರೆಗೂ ಹೋರಾಡುತ್ತೇನೆ. ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ದೊಡ್ಡ ನಾಯಕರು ಹಲವು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ‘ಕುರಿ ಕಾಯುವವನು ಮುಖ್ಯಮಂತ್ರಿ ಆಗಿರುವುದೇ ಹಲವರ ಕಣ್ಣು ಕೆಂಪಾಗಲು ಕಾರಣ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ತಮ್ಮ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಅವರಲ್ಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.