ADVERTISEMENT

ಬೆಂಗಳೂರಿನಲ್ಲಿ ಬೈಕ್ ಕದ್ದು, ತಮಿಳುನಾಡಿನಲ್ಲಿ ಮಾರಾಟ: ಆರು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 2:32 IST
Last Updated 18 ಸೆಪ್ಟೆಂಬರ್ 2022, 2:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ತಮಿಳುನಾಡಿನಲ್ಲಿ ಮಾರುತ್ತಿದ್ದ ಆರೋಪದಡಿ ಆರು ಮಂದಿಯನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

‘ಕೋರಮಂಗಲ ಹಾಗೂ ಬಂಡೇಪಾಳ್ಯ ಠಾಣೆ ಪೊಲೀಸರು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ₹ 30 ಲಕ್ಷ ಮೌಲ್ಯದ 38 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ’ ಎಂದು ‍ಪೊಲೀಸ್ ಮೂಲಗಳು ಹೇಳಿವೆ.

‘ತಮಿಳುನಾಡಿನ ಹೊಸೂರಿನ ಆರೋಪಿಗಳು, ಆಗಾಗ ನಗರಕ್ಕೆ ಬರುತ್ತಿದ್ದರು. ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ಲಾಕ್‌ ಮುರಿದು ಕದ್ದೊಯ್ಯುತ್ತಿದ್ದರು. ನೋಂದಣಿ ಫಲಕಗಳನ್ನು ಬದಲಾಯಿಸಿ ತಮಿಳುನಾಡಿನ ಹಲವು ಹಳ್ಳಿಗಳಲ್ಲಿ ಮಾರುತ್ತಿದ್ದರು.’

ADVERTISEMENT

‘ವಾಹನ ಮಾರಾಟದಿಂದ ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದ ಆರೋಪಿಗಳು, ಐಷಾರಾಮಿ ಜೀವನ ನಡೆಸುತ್ತಿದ್ದರು. ಹಣ ಖಾಲಿಯಾಗುತ್ತಿದ್ದಂತೆ, ಪುನಃ ಕೃತ್ಯ ಎಸಗುತ್ತಿದ್ದರು. ಕೋರಮಂಗಲ, ಮಡಿವಾಳ, ಎಚ್‌ಎಸ್‌ಆರ್‌ ಲೇಔಟ್, ಹುಳಿಮಾವು, ಬೊಮ್ಮನಹಳ್ಳಿ, ಆನೇಕಲ್, ಬಂಡೇಪಾಳ್ಯ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲೂ ಆರೋಪಿಗಳು ಕಳ್ಳತನ ಮಾಡಿರು ವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.