ADVERTISEMENT

ಕೊಳೆಗೇರಿ ಮನೆಗಳ ತೆರವಿಗೆ ತಡೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 1:37 IST
Last Updated 21 ನವೆಂಬರ್ 2019, 1:37 IST

ಬೆಂಗಳೂರು: ನಗರದ ಯಮಲೂರು ಬಳಿಯ ಬೇಲೂರು ಅಂಬೇಡ್ಕರ್ ನಗರ ಕೊಳೆಗೇರಿಯಲ್ಲಿರುವ 120 ಮನೆಗಳ ತೆರವಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.‌

ಈ ಕುರಿತಂತೆ ‘ಬೇಲೂರು ಡಾ. ಬಿ.ಆರ್. ಅಂಬೇಡ್ಕರ್ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕ್ಲಿಫ್ಟನ್ ರೊಜಾರಿಯೊ, ‘ಕೊಳಗೇರಿಗಳು ವಾಸ ಮಾಡುತ್ತಿರುವ ಜಾಗವನ್ನು ಕೆರೆ ಪ್ರದೇಶ ಎಂದು ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಇದೇ 21ಕ್ಕೆ ಸಂಪೂರ್ಣ ಪ್ರದೇಶವನ್ನು ತೆರವುಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದ್ದರಿಂದ ತೆರವು ಕಾರ್ಯಾಚರಣೆಗೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.

‘ಆರ್ಥಿಕವಾಗಿ ಹಿಂದುಳಿದ ದಿನಗೂಲಿ ಹಾಗೂ ಕೂಲಿ ಕಾರ್ಮಿಕರು 40–50 ವರ್ಷಗಳಿಂದ ಬೇಲೂರಿನ ಸರ್ವೆ ನಂಬರ್ 12ರಲ್ಲಿ 4.47 ಎಕರೆ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಲ್ಲಿ 237 ಮನೆಗಳಿದ್ದವು. ಆ ಪೈಕಿ ಸುಮಾರು ನೂರು ಮನೆಗಳನ್ನು ಈಗಾಗಲೇ ನೆಲಸಮ ಮಾಡಲಾಗಿದೆ’ ಎಂಬುದು ಅರ್ಜಿದಾರರ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.