ಬೆಂಗಳೂರು: ‘ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಿಸುವ ಸಂಬಂಧ ಸೋಮವಾರ ಇಲ್ಲಿ ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದರು.
‘ಕ್ಷೇತ್ರದಲ್ಲಿ 22 ಸರ್ಕಾರಿ ಶಾಲೆಗಳಿವೆ. ಇಲ್ಲಿನ ಕಲಿಕಾ ಗುಣಮಟ್ಟ ಯಾವುದೇ ಖಾಸಗಿ ಶಾಲೆಯ ಕಲಿಕೆಯ ಗುಣಮಟ್ಟಕ್ಕಿಂತ ಕಡಿಮೆ ಇರಬಾರದು. ಈ ನಿಟ್ಟಿನಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ಮೂಲಕ ಮಕ್ಕಳನ್ನು ಆಕರ್ಷಿಸಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿಯನ್ನು ಹೆಚ್ಚಿಸಲಾಗುವುದು‘ ಎಂದರು.
ಡ್ಯಾಶ್ಬೋರ್ಡ್ ಬಳಕೆ: ‘ಹೊಸ ಬೋಧನಾ ವಿಧಾನದ ಮೂಲಕ ಮಕ್ಕಳ ಕಲಿಕೆ ಯಾವ ಹಂತದಲ್ಲಿದೆ? ಎಷ್ಟು ಶಾಲೆಗಳಲ್ಲಿ ಕಾರ್ಯಕ್ರಮ ಅನುಷ್ಠಾನಗೊಂಡಿದೆ? ಕಲಿಕೆಯಲ್ಲಿ ಸಾಧಿಸಿರುವ ಯಶಸ್ಸಿನ ಬಗ್ಗೆ ಡ್ಯಾಶ್ಬೋರ್ಡ್ ವ್ಯವಸ್ಥೆ ಮಾಡಲಾಗುವುದು. ಪ್ರತಿದಿನವೂ ಮಾಹಿತಿ ನವೀಕರಣ ನಡೆಯಲಿದೆ. ಆ್ಯಪ್ ಮೂಲಕ ಅದನ್ನು ಖುದ್ದು ಪರಿಶೀಲಿಸಲಿದ್ದೇನೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.