ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ, ಫಲಿತಾಂಶವನ್ನು ಪ್ರಕಟಿಸುವಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪರಿಶ್ರಮ ಮಹತ್ವದ್ದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೊರೊನಾ ಸವಾಲುಗಳ ನಡುವೆಯೂ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ಪರೀಕ್ಷೆ ನಡೆಸಲಾಯಿತು. ಸರ್ಕಾರದ ಮೇಲೆ ವಿಶ್ವಾಸ ತೋರಿಸಿ, ಪರೀಕ್ಷಾ ಪ್ರಕ್ರಿಯೆ ಯಶಸ್ವಿಗೊಳಿಸಿದ್ದೀರಿ. ಎಲ್ಲರ ಪ್ರಯತ್ನದಿಂದ ಇಡೀ ದೇಶವೇ ಕರ್ನಾಟಕದತ್ತ ನೋಡುವಂತಾಗಿದೆ ಎಂದು ಹೇಳಿದ್ದಾರೆ.
ಫಲಿತಾಂಶದಲ್ಲಿ ಹಿನ್ನಡೆ ಕಂಡ ಮಕ್ಕಳು ಧೈರ್ಯ ಕಳೆದುಕೊಳ್ಳದೆ, ಹೆಚ್ಚಿನ ಪ್ರಯತ್ನ, ಆತ್ಮವಿಶ್ವಾಸದಿಂದ ಸಿದ್ಧತೆ ನಡೆಸಿ, ಪೂರಕ ಪರೀಕ್ಷೆ ಬರೆದು ಯಶಸ್ಸು ಗಳಿಸಿ ಎಂದು ಮುಖ್ಯಮಂತ್ರಿ ಹಾರೈಸಿದ್ದಾರೆ.
ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಜನ ಮೆಚ್ಚುವಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೇರಿದಂತೆ ಎಲ್ಲ ಸಚಿವರು, ಅಧಿಕಾರಿ, ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.