ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಹೇಗೆ ಬರೆಯಬೇಕು ಎಂಬ ವಿಚಾರದಲ್ಲಿ ಈ ಹಿಂದಿನ ವರ್ಷಗಳ ಟಾಪರ್ಗಳು ಬರೆದ ಉತ್ತರ ಪತ್ರಿಕೆಗಳ ನಕಲು ಪ್ರತಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಈಚೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸಲಹೆ ಕೇಳಿಬಂದಿತ್ತು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅಧಿಕಾರಿಗಳು ಇದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಟಾಪರ್ಗಳ ಅನುಮತಿ ದೊರೆತರೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಇರುವಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ಉತ್ತರ ಪತ್ರಿಕೆಗಳನ್ನು ವಿತರಿಸಲಾಗುವುದು, ಮುಂದಿನ ವರ್ಷ ಪದವಿಪೂರ್ವ ಶಿಕ್ಷಣ ಮಂಡಳಿಯ ವೆಬ್ಸೈಟ್ನಲ್ಲೇ ಇದನ್ನು ಅಪ್ಲೋಡ್ ಮಾಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಮೂರು ವರ್ಷದ ಹಿಂದೆಯೇ ಈ ಪ್ರಸ್ತಾಪ ಇತ್ತು. ಆದರೆ ವಿದ್ಯಾರ್ಥಿಗಳ ಗೋಪ್ಯತೆ ಕಾಪಾಡುವ ವಿಚಾರ ಬಗೆಹರಿಯದ ಕಾರಣ ಇದುವರೆಗೆ ಈ ಯೋಜನೆಯನ್ನು ಜಾರಿಗೆ ತರುವುದು ಸಾಧ್ಯವಾಗಿರಲಿಲ್ಲ.
ಇಲಾಖೆಯ ಅಧಿಕೃತ ಆದೇಶ ಬಂದ ತಕ್ಷಣ ಟಾಪರ್ ವಿದ್ಯಾರ್ಥಿಗಳಿಂದ ಒಪ್ಪಿಗೆ ಪಡೆದು ಅವರ ಉತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.