ADVERTISEMENT

ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗದ ಬಿ. ದಯಾನಂದ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 1:29 IST
Last Updated 21 ಜೂನ್ 2025, 1:29 IST
<div class="paragraphs"><p>ದಯಾನಂದ</p></div>

ದಯಾನಂದ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಚಾರಣಾಧಿಕಾರಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಎದುರು ಶುಕ್ರವಾರ ಇಬ್ಬರು ಡಿಸಿಪಿಗಳು ಸೇರಿ ಆರು ಮಂದಿ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಹಾಜರಾದರು.

ADVERTISEMENT

ಆದರೆ, ನಗರದ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾದರು. ಒಟ್ಟು 40ಕ್ಕೂ ಅಧಿಕ ಪೊಲೀಸರ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಳ್ಳಲಾಯಿತು. 

ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅಡಾವತ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಸಾಗರ್, ಇಬ್ಬರು ಇನ್‌ಸ್ಪೆಕ್ಟರ್‌ಗಳು, ಇಬ್ಬರು ಎಸಿಪಿಗಳು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣಾ ತಂಡ ಸಂಜೆ 5 ಗಂಟೆವರೆಗೂ ಅಧಿಕಾರಿಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಜಗದೀಶ್ ಅವರು, ಕ್ರೀಡಾಂಗಣದ ಭದ್ರತೆಗೆ ನಿಯೋಜನೆಗೊಂಡಿದ್ದ ಹಿರಿಯ ಅಧಿಕಾರಿಗಳ ಪಟ್ಟಿ ಆಧರಿಸಿ ಸುಮಾರು 45 ಮಂದಿ ಪೊಲೀಸರಿಗೆ ನೋಟಿಸ್ ನೀಡಿದ್ದರು. ಹಂತ-ಹಂತವಾಗಿ ಅಧಿಕಾರಿ-ಸಿಬ್ಬಂದಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ. 

‘ಕಾಲ್ತುಳಿತಕ್ಕೆ ಕಾರಣಗಳೇನು? ಯಾವ ಗೇಟ್ ಬಳಿ ಎಷ್ಟು ಸಿಬ್ಬಂದಿ ನಿಯೋಜಿಸಲಾಗಿತ್ತು? ಕ್ರೀಡಾಂಗಣದ ಬಳಿ ಜನಸಾಗರ ಬರಲು ಕಾರಣವೇನು? ಭದ್ರತೆ ಬಗ್ಗೆ ಪೂರ್ವಾಭಾವಿ ಸಭೆ ನಡೆಸಲಾಗಿತ್ತಾ? ಎಂಬ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಆದರೆ, ವಿಧಾನಸೌಧ ಕಾರ್ಯಕ್ರಮ ಮುಗಿದ ಬಳಿಕ ಆರ್‌ಸಿಬಿ ಆಟಗಾರರು ಕ್ರೀಡಾಂಗಣಕ್ಕೆೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು, ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದತ್ತ ಬಂದರು. ಈ ವೇಳೆ ಜನದಟ್ಟಣೆ ನಿಯಂತ್ರಿಸಲು ಸಾಧ್ಯವಾಗಲಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. 

‘ಸಾಧ್ಯವಾದಷ್ಟು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಗಿತ್ತು. ಆದರೆ, ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಹಿರಿಯ ಅಧಿಕಾರಿಗಳು ಸೂಚಿಸಿದಂತೆ ಭದ್ರತೆ ವ್ಯವಸ್ಥೆೆ ಮಾಡಲಾಗಿತ್ತು’ ಎಂಬುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.