ಬೆಂಗಳೂರು: ‘ಕಬ್ಬನ್ ಉದ್ಯಾನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ 100 ವರ್ಷ ತುಂಬುತ್ತಿರುವ ಕಾರಣ ನಗರದಲ್ಲಿ ಶತಮಾನೋತ್ಸವ ಗ್ರಂಥಾಲಯ ಭವನ ನಿರ್ಮಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಬಿಟಿಎಂ ಬಡಾವಣೆಯ 2ನೇ ಹಂತದಲ್ಲಿರುವ ನೂತನ ಗ್ರಂಥಾಲಯ ಕಟ್ಟಡವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು.
‘ಬೇರೆ ರಾಜ್ಯಗಳಲ್ಲಿರುವ ಗ್ರಂಥಾಲಯಗಳ ವ್ಯವಸ್ಥೆ ಪರಿಶೀಲಿಸಿ, ಎಲ್ಲ ವರ್ಗದ ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಶತಮಾನೋತ್ಸವ ಗ್ರಂಥಾಲಯ ನಿರ್ಮಿಸಲಾಗುವುದು’ ಎಂದರು.
‘6ತಿಂಗಳಲ್ಲಿ ರಾಜ್ಯದಾದ್ಯಂತ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭಗೊಂಡಿವೆ. ಕೊರೊನಾದಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್ ಲೋಕಾರ್ಪಣೆಗೊಳಿಸಿದ್ದು, 3 ಲಕ್ಷಕ್ಕೂ ಹೆಚ್ಚು ಮಂದಿ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಈ ಆಪ್ನಲ್ಲಿ ಲಭ್ಯ. ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯದಲ್ಲಿ 6,841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ. ಇದು ದೇಶ ದಲ್ಲೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದರು.
ಶಾಸಕಿ ಸೌಮ್ಯಾರೆಡ್ಡಿ, ಪಾಲಿಕೆ ಸದಸ್ಯ ದೇವದಾಸ್, ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ ಕುಮಾರ ಎಸ್.ಹೊಸಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.