ಬೆಂಗಳೂರು: ‘ರಾಜ್ಯ ಸರ್ಕಾರವು ಕಂದಾಯ ಸೇರಿ ವಿವಿಧ ಇಲಾಖೆಗಳಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ (ಇಡಬ್ಲ್ಯುಎಸ್) ಕಲ್ಪಿಸದೆ ಅನ್ಯಾಯ ಮಾಡಿದೆ’ ಎಂದು ಬಡಗನಾಡು ಬ್ರಾಹ್ಮಣ ಮಹಾಸಭಾ ತಿಳಿಸಿದೆ.
‘ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಸಾವಿರಕ್ಕೂ ಅಧಿಕ ಹುದ್ದೆಗಳು, ಕೌಶಲಾಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಜಿಟಿಟಿಸಿಯಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳು, ಪರಿಸರ ಇಲಾಖೆ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದರೆ, ಅಧಿಸೂಚನೆಯಲ್ಲಿ ಇಡಬ್ಲ್ಯುಎಸ್ ಮೀಸಲಾತಿ ಕಲ್ಪಿಸಿಲ್ಲ’ ಎಂದು ಮಹಾಸಭಾದ ಗೌರವಾಧ್ಯಕ್ಷರು ತಿಳಿಸಿದ್ದಾರೆ.
‘ಕೇಂದ್ರ ಸರ್ಕಾರ ಜಾರಿಗೆ ತಂದ ಶೇ 10ರಷ್ಟು ಇಡಬ್ಲ್ಯುಎಸ್ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರ ಕೂಡಲೇ ಎಲ್ಲ ನೇಮಕಾತಿಯಲ್ಲಿಯೂ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೂ ಮೀಸಲಾತಿ ಕಲ್ಪಿಸಬೇಕು. ಇಲ್ಲವಾದಲ್ಲಿ ಅರ್ಹ ಬಡ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.