ಬೆಂಗಳೂರು: ‘ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಬಲವಂತದ ಹಿಂದಿ ಹೇರಿಕೆ ದೌರ್ಜನ್ಯ ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಕನ್ನಡಿಗರು ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳ ಕನ್ನಡ ವಿರೋಧಿ ಧೋರಣೆ ಖಂಡಿಸಬೇಕು’ ಎಂದು ಕಲಾವಿದ ‘ಮುಖ್ಯಮಂತ್ರಿ’ ಚಂದ್ರು ತಿಳಿಸಿದ್ದಾರೆ.
‘ಭಾರತವು ಮೊದಲಿನಿಂದಲೂ ವೈವಿಧ್ಯತೆಯಲ್ಲಿ ಏಕತೆ ಎಂಬ ತತ್ವ ಅನುಸರಿಸುತ್ತಿದೆ. ಅದರಂತೆ ಕೇಂದ್ರ ಸರ್ಕಾರವು ಎಲ್ಲ ಪ್ರಾದೇಶಿಕ ಭಾಷೆಗಳನ್ನೂ ಗೌರವಿಸಬೇಕು. ಆದರೆ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಿಂದಿಯೇತರ ರಾಜ್ಯಗಳ ಮೇಲೆ ಬಲವಂತವಾಗಿ ಭಾಷೆಯನ್ನು ಹೇರಿಕೆ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯದ ಕೈಗಾರಿಕೆಗಳಲ್ಲಿಯೂ ಕೇಂದ್ರ ಸರ್ಕಾರವು ಒತ್ತಾಯದಿಂದ ನಡೆಸುತ್ತಿರುವ ಹಿಂದಿ ಸಪ್ತಾಹದ ಆಚರಣೆಯೇ ಇದಕ್ಕೆ ಸಾಕ್ಷಿ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಬಲವಂತದ ಭಾಷಾ ಹೇರಿಕೆ ನಿಲ್ಲಿಸಲು ಮತ್ತು ದೇಶದಾದ್ಯಂತ ವೈವಿಧ್ಯತೆಯಲ್ಲಿ ಏಕತೆ ತತ್ವವನ್ನು ಸಮಾನವಾಗಿ ಅನುಷ್ಠಾನಗೊಳಿಸಲು ಕನ್ನಡಿಗರು ಸರ್ಕಾರಕ್ಕೆ ಪತ್ರ ಬರೆದು, ಕೇಂದ್ರ ಸರ್ಕಾರದ ಜತೆಗೆ ಈ ವಿಷಯವಾಗಿ ಮಾತುಕತೆ ನಡೆಸಲು ಒತ್ತಾಯಿಸಬೇಕು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.