ಬೆಂಗಳೂರು: ‘ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡುವುದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ, ಬೀದಿಬದಿ ವ್ಯಾಪಾರಿಗಳಿಗಾಗಿಯೇ ಪ್ರತ್ಯೇಕ ವಲಯಗಳನ್ನು ನಿರ್ಮಾಣ ಮಾಡುವ ಚಿಂತನೆಯಿದೆ’ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.
ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ಸಂಘಟನೆ (ನಾಸ್ವಿ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೀದಿಬದಿ ವ್ಯಾಪಾರಿಗಳ ರಾಷ್ಟ್ರೀಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
‘ನಗರದ 8 ವಲಯಗಳಲ್ಲಿ ವ್ಯಾಪಾರಸ್ಥರ ಸಮಿತಿಗಳನ್ನು ರಚಿಸಲಾಗಿದೆ.ನಗರದಲ್ಲಿ 80 ಸಾವಿರ ಬೀದಿಬದಿ ವ್ಯಾಪಾರಿಗಳಿದ್ದು, ಇದರಲ್ಲಿ 24 ಸಾವಿರ ಮಂದಿಯನ್ನು ಗುರುತಿಸಲಾಗಿದೆ. 15 ಸಾವಿರ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಗಿದೆ. ಉಳಿದವರಿಗೆ ಕೂಡಾ ಗುರುತಿನ ಚೀಟಿಯನ್ನು ಶೀಘ್ರ ವಿತರಿಸಲಾಗುವುದು’ ಎಂದರು.
‘ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡುವುದರಿಂದ ಜನತೆಗೆ ತೊಂದರೆಯಾಗುತ್ತಿದೆ. ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸಿದಲ್ಲಿ ಹಲವು ಕುಟುಂಬಗಳು ಬೀದಿಗೆ ಬರಲಿವೆ. ಕಿರುಕುಳ ರಹಿತ ಜೀವನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣ ಮಾಡಿಕೊಡಬೇಕಿದೆ’ ಎಂದು ಹೇಳಿದರು.
ಶಾಸಕ ರಾಮಲಿಂಗಾ ರೆಡ್ಡಿ, ‘ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಸುರಕ್ಷತೆ, ಬೀದಿಬದಿ ವ್ಯಾಪಾರ ಸೇರಿದಂತೆ ವಿವಿಧ ವಿಷಯಕ್ಕೆ ಸಂಬಂಧಿಸಿದ ಜನಪರ ಕಾಯ್ದೆಗಳನ್ನು ರೂಪಿಸಲಾಯಿತು. ಬಳಿಕ ಬಂದ ಸರ್ಕಾರ ಈ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಆಸಕ್ತಿ ತೋರಿಲ್ಲ. ನಾವು ₹1 ಕೆಲಸಕ್ಕೆ 10 ಪೈಸೆ ಪ್ರಚಾರ ಪಡೆದುಕೊಂಡೆವು. ಈಗಿನ ಸರ್ಕಾರ 10 ಪೈಸೆ ಕೆಲಸ ಮಾಡಿ ₹1 ಪ್ರಚಾರ ಪಡೆದುಕೊಳ್ಳುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.