ಬೆಂಗಳೂರು: ಮಾರತ್ತಹಳ್ಳಿ ಸಮೀಪದ ವಿನಾಯಕ ಲೇಔಟ್ನ ಕಟ್ಟಡವೊಂದರಲ್ಲಿ ಪೇಯಿಂಗ್ ಗೆಸ್ಟ್ ಆಗಿ ವಾಸವಿದ್ದ ಶಂಕರ್ ಪ್ರಸಾದ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಡಿಶಾದ ಮೂಲದ ಅವರು ಬಿ.ಟೆಕ್ ಪದವೀಧರ. ಕಳೆದ ತಿಂಗಳು ನಗರಕ್ಕೆ ಬಂದಿದ್ದ ಅವರು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು.
‘ಪೇಯಿಂಗ್ ಗೆಸ್ಟ್ ಕಟ್ಟಡದ ಬಳಿಯೇ ಅವರ ಸ್ನೇಹಿತರೂ ನೆಲೆಸಿದ್ದಾರೆ. ಎಲ್ಲರೂ ವಾರಾಂತ್ಯದಲ್ಲಿ ಒಟ್ಟಿಗೆ ಊಟಕ್ಕೆ ಹೋಗುತ್ತಿದ್ದರು. ಭಾನುವಾರ ರಾತ್ರಿ ಶಂಕರ್ ಅವರಿಗೆ ಸ್ನೇಹಿತರು ಕರೆ ಮಾಡಿದಾಗ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಅನುಮಾನಗೊಂಡ ಸ್ನೇಹಿತರು ಪೇಯಿಂಗ್ ಗೆಸ್ಟ್ ಕಟ್ಟಡಕ್ಕೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ’ ಎಂದರು.
‘ಹಲವು ಕಂಪನಿಗಳಲ್ಲಿ ಸಂದರ್ಶನ ನೀಡಿದರೂ ಕೆಲಸ ಸಿಕ್ಕಿರಲಿಲ್ಲ. ಅದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವ ಅನುಮಾನವಿದೆ. ಸ್ನೇಹಿತರ ಹೇಳಿಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.