ಮುಂಬೈ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚುತ್ತಿರುವ ಕರ್ನಾಟಕದ ಕೆ.ಎಲ್. ರಾಹುಲ್ ಮತ್ತು ಮನೀಷ್ ಪಾಂಡೆ ಅವರು ಬಾಂಗ್ಲಾದೇಶ ಎದುರಿನ ಟ್ವೆಂಟಿ–20 ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಟೆಸ್ಟ್ ತಂಡದಲ್ಲಿ ರಾಹುಲ್ಗೆ ಸ್ಥಾನ ಲಭಿಸಿಲ್ಲ. ಮಯಂಕ್ ಅಗರವಾಲ್ ಸ್ಥಾನ ಉಳಿಸಿಕೊಂಡಿದ್ದಾರೆ.
ಟ್ವೆಂಟಿ–20 ತಂಡದಲ್ಲಿ ದೆಹಲಿಯ ಬ್ಯಾಟ್ಸ್ಮನ್ ಶಿಖರ್ ಧವನ್, ಕೇರಳದ ಸಂಜು ಸ್ಯಾಮ್ಸನ್ ಕೂಡ ಸ್ಥಾನ ಗಳಿಸಿದ್ದಾರೆ. ಮುಂಬೈನ ಬೀಸು ಹೊಡೆತಗಾರ ಶಿವಂ ದುಬೆಗೆ ಭಾರತ ತಂಡದ ಪರ ಪದಾರ್ಪಣೆ ಮಾಡುವ ಅವಕಾಶ ಲಭಿಸಿದೆ. ಸ್ಪಿನ್ನರ್ ಚಾಹಲ್ ಕೂಡ ಮರಳಿದ್ಧಾರೆ. ಆದರೆ, ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುತ್ತಿಲ್ಲ. ಅವರು ವಿಶ್ರಾಂತಿ ಪಡೆಯುತ್ತಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುವರು. ಟೆಸ್ಟ್ ಸರಣಿಗೆ ಕೊಹ್ಲಿ ಮರಳುವರು. ದಕ್ಷಿಣ ಆಫ್ರಿಕಾ ವಿರುದ್ಧ 3–0 ಜಯ ಸಾಧಿಸಿದ ಬಳಗವನ್ನೇ ಮುಂದುವರೆಸಲಾಗಿದೆ.
‘ಅನುಭವಿ ಮಧ್ಯಮವೇಗಿ ಭುವನೇಶ್ವರ್ ಕುಮಾರ್ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಆಡಲು ಮರಳುತ್ತಾರೆ’ ಎಂದು ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾಧ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂಡಗಳು: ಟ್ವೆಂಟಿ–20: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಕೃಣಾಲ್ ಪಾಂಡ್ಯ, ಯಜುವೇಂದ್ರ ಚಾಹಲ್, ರಾಹುಲ್ ಚಾಹರ್, ದೀಪಕ್ ಚಾಹರ್, ಖಲೀಲ್ ಅಹಮದ್, ಶಿವಂ ದುಬೆ, ಶಾರ್ದೂಲ್ ಠಾಕೂರ್.
ಟೆಸ್ಟ್: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಮಯಂಕ್ ಅಗರವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮವಿಹಾರಿ, ವೃದ್ದಿಮಾನ್ ಸಹಾ (ವಿಕೆಟ್ಕೀಪರ್), ರವೀಂದ್ರ ಜಡೇಜ, ಆರ್. ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶುಭಮನ್ ಗಿಲ್. ರಿಷಭ್ ಪಂತ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.