ADVERTISEMENT

ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ವಿಳಂಬ: ತೇಜಸ್ವಿ ಸೂರ್ಯ ಕಿಡಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 4:37 IST
Last Updated 19 ಡಿಸೆಂಬರ್ 2021, 4:37 IST
   

ಬೆಂಗಳೂರು: ‘ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ವಿಳಂಬವು ಬಿಬಿಎಂಪಿಯ ನಿರ್ಲಕ್ಷ್ಯ ಹಾಗೂ ಅಸಮರ್ಪಕ ಕಾರ್ಯನಿರ್ವಹಣೆಗೆ ಸಾಕ್ಷಿ’ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ವಿಧಾನಪರಿಷತ್‌ ಸದಸ್ಯ ಗೋಪಿನಾಥ್ ರೆಡ್ಡಿ ಜೊತೆ ಶನಿವಾರ ಕಾಮಗಾರಿ ಪರಿಶೀಲಿಸಿದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘2.5 ಕಿ.ಮೀ.ಉದ್ದದ ಈ ಮೇಲ್ಸೇತುವೆಯು ಕೇಂದ್ರೀಯ ಸದನದಿಂದ ಸೋನಿ ವರ್ಲ್ಡ್‌ ವೃತ್ತ ಮಾರ್ಗವಾಗಿ ಈಜಿಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ₹203 ಕೋಟಿ ವೆಚ್ಚದ ಈ ಕಾಮಗಾರಿ 2018ರಲ್ಲಿ ಶುರುವಾಗಿತ್ತು. ಇದಕ್ಕೆ 30 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಹೀಗಿದ್ದರೂ ಇದು ಪೂರ್ಣಗೊಂಡಿಲ್ಲ. ಗುತ್ತಿಗೆ ಪಡೆದಿರುವ ಸಿಂಪ್ಲೆಕ್ಸ್‌ ಇನ್‌ಫ್ರಾಸ್ಟ್ರಕ್ಚರ್‌ ಸಂಸ್ಥೆ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಇದು ಸಾಕ್ಷಿ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಕಾಮಗಾರಿ ವಿಳಂಬದಿಂದ ಕೋರಮಂಗಲದ 100 ಅಡಿ ರಸ್ತೆಯಲ್ಲಿ ಸಂಚರಿಸಲು ಪ್ರಯಾಸ ಪಡುವಂತಾಗಿದೆ. ಇದಕ್ಕೆ ಗುತ್ತಿಗೆದಾರರ ಬೇಜವಾಬ್ದಾರಿತನವೇ ಕಾರಣ. 3 ವರ್ಷದಲ್ಲಿ ಶೇ 45ರಷ್ಟು ಕೆಲಸಗಳಷ್ಟೇ ಮುಗಿದಿವೆ. 2023ರ ಜನವರಿಯೊಳಗೆ ಉಳಿದ ಕೆಲಸ ಮುಗಿಸಲು ಸಾಧ್ಯವೆ’ ಎಂದು ಪ್ರಶ್ನಿಸಿದರು.

‘ಇಂತಹ ಸಣ್ಣ ಕಾಮಗಾರಿಯನ್ನೂ ನಿಗದಿತ ಅವಧಿಯೊಳಗೆ ಮುಗಿಸಲು ಸಾಧ್ಯವಾಗದಿದ್ದರೆ ಹೇಗೆ. ಬಿಬಿಎಂಪಿಯ ಅಸಮರ್ಥತೆಗೆ ಇದು ಸಾಕ್ಷಿ. 2023ರ ಜನವರಿಯೊಳಗೆ ಕಾಮಗಾರಿ ಮುಗಿಸಲು ಪ್ರಯತ್ನಿಸಬೇಕು. ಅಗತ್ಯವಿದ್ದರೆ ಗುತ್ತಿಗೆದಾರರನ್ನೇ ಬದಲಿಸಿ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.