ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಫುಟ್ಪಾತ್ ನಿರ್ಮಾಣದ ಉದ್ದೇಶದಿಂದ ಟೆಂಡರ್ ಶೂರ್ ಅಡಿಯಲ್ಲಿ ಅಭಿವೃದ್ಧಿಪಡಿಸಿದ ಪಾದಚಾರಿ ಮಾರ್ಗಗಳು ಕಸ ಸುರಿಯುವ ತಾಣವಾಗಿ ಮಾರ್ಪಡುತ್ತಿವೆ.
ಜಯನಗರದ ಪಾದಚಾರಿ ಮಾರ್ಗಗಳಲ್ಲಿ ಕಸದ ರಾಶಿ ಮತ್ತು ಕಟ್ಟಡ ನಿರ್ಮಾಣಕ್ಕೆ ಬೇಕಾದ ಸಾಮಾಗ್ರಿಗಳು ಅಲ್ಲಲ್ಲಿ ರಾಶಿ ಬಿದ್ದಿವೆ. ಇದರಿಂದಾಗಿ ಪಾದಚಾರಿಗಳು ಅನಿವಾರ್ಯವಾಗಿ ರಸ್ತೆಯಲ್ಲೇ ಸಾಗಬೇಕಾದ ಸ್ಥಿತಿ ಇದೆ.
‘ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಪಾದಚಾರಿ ಮಾರ್ಗ ನಿರ್ಮಾಣವಾಗಿವೆ. ಆದರೆ, ಬಳಕೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ಆಗುತ್ತಿಲ್ಲ. ಕೆಲವರು ಕಸ ಸುರಿದರೆ, ಹಲವರು ಕಟ್ಟಡ ನಿರ್ಮಾಣ ಸಾಮಾಗ್ರಿಗಳಾದ ಮರಳು, ಕಲ್ಲು, ಜಲ್ಲಿ ಸುರಿಯುತ್ತಾರೆ. ಇನ್ನೂ ಕೆಲವರು ದ್ವಿಚಕ್ರ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸುತ್ತಾರೆ. ಹೀಗಾದರೆ ಸಾರ್ವಜನಿಕರು ಎಲ್ಲಿ ಓಡಾಡಬೇಕು? ಸಂಚಾರಕ್ಕೆ ತೊಂದರೆ ಉಂಟು ಮಾಡುವವರಿಗೆ ಬಿಬಿಎಂಪಿ ದಂಡ ವಿಧಿಸಬೇಕು’ ಎಂಬುದು ಪಾದಚಾರಿಗಳ ಒತ್ತಾಯ.
‘ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಸಿದರೂ ಪದೇ ಪದೇ ಇದೇ ರೀತಿ ಆಗುತ್ತಿದೆ. ಜಯನಗರದಲ್ಲಿ ಹಾಕಿರುವ ಕಸದ ರಾಶಿಯನ್ನು ತೆರವುಗೊಳಿಸುವಂತೆ ವಾರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದುಬಿಬಿಎಂಪಿ ಮುಖ್ಯ ಎಂಜಿನಿಯರ್ (ಯೋಜನೆ) ಕೆ.ಟಿ.ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.