ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತನಿಖಾ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೈಯಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು, ವೈದ್ಯರು ಸೇರಿ ಹಲವರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಿದ್ದಾರೆ. 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ. ಭ್ರೂಣ ಹತ್ಯೆ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಸಿಐಡಿ ಅಧಿಕಾರಿಗಳು, ಪುರಾವೆ ಸಮೇತ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಗೊತ್ತಾಗಿದೆ.
‘ಸ್ಕ್ಯಾನಿಂಗ್ ಯಂತ್ರಗಳ ಅಕ್ರಮ ಮಾರಾಟ ಹಾಗೂ ಬಳಕೆಗೆ ಸಂಬಂಧಪಟ್ಟ ಅಂಶಗಳು ತನಿಖೆಯಲ್ಲಿ ಪತ್ತೆಯಾಗಿವೆ. ವೈದ್ಯರು ಹಾಗೂ ಇತರರು, ಹೆಚ್ಚು ಹಣ ಸಂಪಾದಿಸಲು ತಮ್ಮದೇ ತಂಡ ಕಟ್ಟಿಕೊಂಡು ಕೃತ್ಯ ಎಸಗುತ್ತಿದ್ದರು. ಎಲ್ಲ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಯ್ದೆ ಪ್ರಕಾರ ವರದಿಯೊಂದನ್ನು ಆರೋಗ್ಯ ಅಧಿಕಾರಿಗಳಿಗೆ ನೀಡಬೇಕು. ವರದಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕಿದೆ. ನ್ಯಾಯಾಲಯಕ್ಕೂ ದೋಷಾರೋಪ ಪಟ್ಟಿ ಸಲ್ಲಿಸಲು ತಯಾರಿ ನಡೆದಿದೆ’ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.