ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ–ಐಜಿಪಿ) ಕಚೇರಿ ಬಳಿ ಅಪಘಾತ ಸಂಭವಿಸಿದ್ದು, ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಹೆಡ್ ಕಾನ್ಸ್ಟೆಬಲ್ಚೆನ್ನಗಂಗಯ್ಯ (54) ಮೃತಪಟ್ಟಿದ್ದಾರೆ.
‘ನೃಪತುಂಗ ರಸ್ತೆಯಲ್ಲಿ ಬುಧವಾರ ಸಂಜೆ 5.40ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಚೆನ್ನಗಂಗಯ್ಯ ಅವರ ಪಕ್ಕೆಲುಬು ಹಾಗೂ ಭುಜಕ್ಕೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದರು. ಹಾಸ್ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಅವರು ಅಸುನೀಗಿದರು’ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ಹೇಳಿದರು. ‘ಚೆನ್ನಗಂಗಯ್ಯ ಅವರು ಬೈಕ್ನಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಕೆ.ಆರ್.ವೃತ್ತದ ಕಡೆಯಿಂದ ವೇಗವಾಗಿ ಬಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ದ್ವಿಚಕ್ರ ವಾಹನ ಸಮೇತ ಸವಾರ ಪರಾರಿಯಾಗಿದ್ದಾನೆ’
‘ರಸ್ತೆಯಲ್ಲಿ ನರಳುತ್ತ ಬಿದ್ದಿದ್ದ ಚೆನ್ನಗಂಗಯ್ಯ ಅವರನ್ನು ಸಮೀಪದ ಮಾರ್ಥಾಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸ್ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.
‘ಸವಾರನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.