ರಾಯಚೂರು: ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಶಿವಾನಂದ ಕೆಳಗಿನಮನಿ ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಕೆಳಗಿನಮನಿ ಹಾವೇರಿ ಮೂಲದವರು. 28 ವರ್ಷಗಳ ಸುದೀರ್ಘ ಬೋಧನಾನುಭವ ಹೊಂದಿರುವ ಅವರು ಈವರೆಗೆ 50 ಸಂಶೋಧನಾ, ಹದಿನಾಲ್ಕು ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ.
ಅನೇಕ ವಿದ್ಯಾರ್ಥಿಗಳಿಗೆ ಎಂ.ಫಿಲ್ ಮತ್ತು ಪಿ.ಎಚ್ಡಿ ಮಾರ್ಗದರ್ಶನ ಮಾಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕ, ದೂರ ಶಿಕ್ಷಣ ಕೇಂದ್ರದ ಸಂಚಾಲಕ, ಹಲವಾರು ವಿಶ್ವವಿದ್ಯಾಲಯಗಳ ಪರೀಕ್ಷಾ ಮತ್ತು ಅಧ್ಯಯನ ಮಂಡಳಿಗಳ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಹಾ.ಮಾ.ನಾಯಕ ಟ್ರಸ್ಟ್, ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ನ ಸದಸ್ಯರಾಗಿ, ಪ್ರೊ.ತೇಜಸ್ವಿ ಕಟ್ಟಿಮನಿ ಟ್ರಸ್ಟ್ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇವರ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಫ.ಗು.ಹಳಕಟ್ಟಿ ಪ್ರಶಸ್ತಿಗಳು ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.