
ಪೊಲೀಸ್
ಸಾಂದರ್ಭಿಕ ಚಿತ್ರ
ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರಹಳ್ಳಿ ನಿವಾಸಿ ಶರತ್ (31) ಎಂಬಾತನನ್ನು ಬಂಧಿಸಿ, 241 ಗ್ರಾಂ ಚಿನ್ನ, 2.8 ಕೆ.ಜಿ ಬೆಳ್ಳಿ ₹1.30 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ತ್ಯಾಗರಾಜನಗರದ ಮನೆಯೊಂದರಲ್ಲಿ 2025ರ ಆಗಸ್ಟ್ನಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಮನೆ ಮಾಲೀಕರು ನೀಡಿದ ದೂರಿನ ಮೇರೆಗೆ ಅರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಮನೆ ಮಾಲೀಕರು, ಪುತ್ರಿಯೊಂದಿಗೆ ಬಸವನಗುಡಿಯ ತ್ಯಾಗರಾಜನಗರದಲ್ಲಿ ವಾಸವಾಗಿದ್ದಾರೆ. ಸದ್ಯ ಅವರ ಪುತ್ರಿ ಹೈದರಾಬಾದ್ನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ. 25 ವರ್ಷಗಳಿಂದ ದೂರುದಾರರ ಮನೆಯಲ್ಲಿ ಆರೋಪಿಯ ದೊಡ್ಡಮ್ಮ ಮನೆ ಕೆಲಸ ಮಾಡುತ್ತಿದ್ದರು. ನಂಬಿಕೆಯಿಂದ ಮನೆಯ ಮತ್ತೊಂದು ಬೀಗದ ಕೀಯನ್ನು ಆಕೆಗೆ ನೀಡಿದ್ದರು ಎಂದು ಪೊಲೀಸರು ತಿಳಿಸಿದರು.
ದೊಡ್ಡಮ್ಮನಿಗೆ ಊಟ ನೀಡಲು ಆಗಾಗ್ಗೆ ದೂರುದಾರರ ಮನೆಗೆ ಹೋಗುತ್ತಿದ್ದ ಆರೋಪಿ, ಮನೆ ಮಾಲೀಕರು ಇಲ್ಲದಿರುವುದನ್ನು ತಿಳಿದು, ಕಳ್ಳತನ ಮಾಡಲು ಸಂಚು ರೂಪಿಸಿದ್ದ. ದೊಡ್ಡಮ್ಮನಿಗೂ ತಿಳಿಯದಂತೆ, ಅವರ ಬಳಿಯಿದ್ದ ಬೀಗದ ಕೀ ಪಡೆದು ಕಳವು ಮಾಡಿದ್ದ ಎಂದು ಪೊಲೀಸರು ಹೇಳಿದರು.
ಅನುಮಾನದ ಮೇರೆಗೆ ಮನೆಗೆಲಸದಾಕೆ ಮತ್ತು ಆಕೆಯ ಸಹೋದರಿ ಪುತ್ರನನ್ನು ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ತಾಂತ್ರಿಕ ಆಯಾಮದಲ್ಲಿ ತನಿಖೆ ನಡೆಸಿದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮತ್ತೊಮ್ಮೆ ಮನೆಗೆಲಸದಾಕೆ ಸಹೋದರಿ ಪುತ್ರನನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ವಿಲಾಸಿ ಜೀವನ ನಡೆಸಲು ಕಳ್ಳತನ ಮಾಡಿರುವುದು ಗೊತ್ತಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.