ಬೆಂಗಳೂರು: ಹೆಸರಘಟ್ಟ ಬಳಿಯ ಚಿಕ್ಕಬಾಣಾವರ ಪುರಸಭೆ ಕಚೇರಿಯಲ್ಲಿ ಕಳ್ಳತನದ ಯತ್ನ ನಡೆದಿದ್ದು, ಈ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಬುಧವಾರ ರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ. ಪುರಸಭೆ ಅಧಿಕಾರಿಗಳು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಪುರಸಭೆ ಕಚೇರಿಯೊಳಗೆ ನುಗ್ಗಿದ ಕಳ್ಳರು, ಹಲವೆಡೆ ಹುಡುಕಾಡಿದ್ದಾರೆ. ಕೆಲ ಹೊತ್ತಿನ ನಂತರ ಅಲ್ಲಿಂದ ಹೊರಟು ಹೋಗಿದ್ದಾರೆ. ತಮ್ಮ ಗುರುತು ಸಿಗಬಾರದೆಂಬ ಕಾರಣಕ್ಕೆ, ಕಚೇರಿಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದ ಡಿವಿಆರ್ ಕದ್ದೊಯ್ದಿದ್ದಾರೆ’ ಎಂದು ತಿಳಿಸಿದರು.
‘ಕಚೇರಿಯಲ್ಲಿ ಹಣ ಹಾಗೂ ಯಾವುದೇ ಬೆಲೆಬಾಳುವ ವಸ್ತುಗಳು ಇರಲಿಲ್ಲ. ಸದ್ಯಕ್ಕೆ ಯಾವ ವಸ್ತುಗಳೂ ಕಳ್ಳತನವಾಗಿಲ್ಲವೆಂದು ಸಿಬ್ಬಂದಿ ಹೇಳಿದ್ದಾರೆ. ಆದರೆ, ಕಳ್ಳರು ಕಚೇರಿಗೆ ನುಗ್ಗಿದ್ದು ಏಕೆ? ಎಂಬ ಅನುಮಾನವಿದೆ. ಎಲ್ಲ ಆಯಾಮದಲ್ಲಿ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.