ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ತಾಯಿ– ಮಗನನ್ನು ಮೂವರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದು, ಆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಪಟೇಲ್ ವೀರೇಶ್ ಹಾಗೂ ಅವರ ತಾಯಿಯನ್ನು ಕಾರಿನಲ್ಲಿ ಹತ್ತಿಸಿಕೊಂಡಿದ್ದ ದುಷ್ಕರ್ಮಿಗಳು, ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ದಾವಣಗೆರೆಯವೀರೇಶ್ ಹಾಗೂ ತಾಯಿ, ಮೇ 19ರಂದು ಬೆಳಿಗ್ಗೆ ಬಸ್ಸಿನಲ್ಲಿ ಬೆಂಗಳೂರಿಗೆ ಬಂದು ಗೊರಗುಂಟೆಪಾಳ್ಯದಲ್ಲಿ ಇಳಿದಿದ್ದರು. ಕೆಂಗೇರಿ ಕಡೆಗೆ ಹೋಗಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ಅವರಿದ್ದ ಸ್ಥಳಕ್ಕೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೆಂಗೇರಿಯವರೆಗೆ ಡ್ರಾಪ್ ಕೊಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದರು.’
‘ಬೈರೋಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದ ದುಷ್ಕರ್ಮಿಗಳು, ಚಾಕು ತೋರಿಸಿ ತಾಯಿ–ಮಗನನ್ನು ಬೆದರಿಸಿದ್ದರು. ₹ 2 ಸಾವಿರ ನಗದು ಹಾಗೂ ಚಿನ್ನಾಭರಣ ಸೇರಿದಂತೆ ₹ 3 ಲಕ್ಷ ಮೌಲ್ಯದ ವಸ್ತುಗಳನ್ನು ಸುಲಿಗೆ ಮಾಡಿದ್ದರು. ನಂತರ, ಅವರಿಬ್ಬರನ್ನು ಕಾರಿನಿಂದ ಹೊರಗೆ ತಳ್ಳಿ ಸ್ಥಳದಿಂದ ಹೊರಟು ಹೋಗಿದ್ದಾರೆ’ ಎಂದು ಪೊಲೀಸರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.