ಬೆಂಗಳೂರು: ಮನೆಗಳಲ್ಲಿ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯದ ಹರಿಪ್ರಸಾದ್ (19) ಬಂಧಿತ ಆರೋಪಿ.
ಫೆ.6ರಂದುವಿಜಯನಗರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ₹66 ಸಾವಿರ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ಕದ್ದು ಆರೋಪಿ ಪರಾರಿಯಾಗಿದ್ದ. ಈ ಸಂಬಂಧ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.
‘ಆರೋಪಿ ವಿವಿಧ ಠಾಣೆಗಳ ವ್ಯಾಪ್ತಿಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಕೃತ್ಯಗಳ ಬಗ್ಗೆ ಆರೋಪಿ ಮಾಹಿತಿ ನೀಡಿದ. ಆತನನ್ನು ದಸ್ತಗಿರಿ ಮಾಡಿ, ಒಂದು ಚಿನ್ನದ ಸರ ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.
‘ಆರೋಪಿಯ ಬಂಧನದಿಂದ ವಿಜಯನಗರ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣ, ಕಾಮಾಕ್ಷಿಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಎರಡು ಬೈಕ್ ಕಳವು ಹಾಗೂ ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಒಂದು ಬೈಕ್ ಕಳವು ಪ್ರಕರಣಗಳನ್ನು ಭೇದಿಸಿದಂತಾಗಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 380ರಡಿ (ಕಳವು) ಪ್ರಕರಣ ದಾಖಲಾಗಿದೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.