ಬಂಧನ ( ಸಾಂಕೇತಿಕ ಚಿತ್ರ)
ಬೆಂಗಳೂರು: ಟಿವಿ-ಡಿಶ್ ಕೇಬಲ್ ರಿಪೇರಿ ನೆಪದಲ್ಲಿ ಮನೆಗಳ ಬೀಗ ಒಡೆದು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರ ನಿವಾಸಿ ನಾಗರಾಜ್ ಅಲಿಯಾಸ್ ರಿಹಾನ್ (32) ಎಂಬಾತನನ್ನು ಬಂಧಿಸಿ, ₹ 20 ಲಕ್ಷ ಮೌಲ್ಯದ 300 ಗ್ರಾಂ. ಚಿನ್ನಾಭರಣ ಹಾಗೂ ಒಂದು ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಟಿ.ವಿ ರಿಪೇರಿ ಮಾಡುವ ನೆಪದಲ್ಲಿ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಬಳಿಕ ಕದ್ದ ವಸ್ತುಗಳನ್ನು ತನ್ನ ಪತ್ನಿ ಮೂಲಕ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಡರಹಳ್ಳಿಯ ಚೇತನ್ ಸರ್ಕಲ್ ಬಳಿ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಸಂಬಂಧ ದೂರು ದಾಖಲಾಗಿತ್ತು. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದರು. ನಾಗರಾಜ್ನ ಬೆರಳಚ್ಚು ಪತ್ತೆಯಾಗಿತ್ತು. ಹತ್ತು ತಿಂಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನೈಸ್ ರಸ್ತೆಯ ಕೊಡಿಗೆಹಳ್ಳಿ ಸೇತುವೆ ಬಳಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.