ADVERTISEMENT

ಕದ್ದ ಆಭರಣ ಮಾರಲು ಬಂದು ಸಿಕ್ಕರು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 20:47 IST
Last Updated 24 ಫೆಬ್ರುವರಿ 2021, 20:47 IST
ಬಂಧಿತ ಆರೋಪಿಗಳು ಹಾಗೂ ಜಪ್ತಿ ಮಾಡಲಾದ ಚಿನ್ನಾಭರಣ
ಬಂಧಿತ ಆರೋಪಿಗಳು ಹಾಗೂ ಜಪ್ತಿ ಮಾಡಲಾದ ಚಿನ್ನಾಭರಣ   

ಬೆಂಗಳೂರು: ನಗರದ ಹಲವು ಮನೆಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.

‘ಮಾಗಡಿ ತಾಲ್ಲೂಕಿನ ಸುನೀಲ್ (30) ಹಾಗೂ ಹೆಬ್ಬಾಳ ಗುಡ್ಡದಹಳ್ಳಿಯ ಸೋಮಣ್ಣ ಲೇಔಟ್‌ನ ಹೇಮಂತ್ (23) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 4,890 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹೆಬ್ಬಾಳದ ಪಿಳೇಕಮ್ಮ ದೇವಸ್ಥಾನ ಬಳಿ ಸುತ್ತಾಡುತ್ತಿದ್ದ ಆರೋಪಿಗಳು, ತಮ್ಮ ಬಳಿ ಇದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕಡಿಮೆ ಬೆಲೆಗೆ ಚಿನ್ನಾಭರಣ ನೀಡುವುದಾಗಿ ಸಾರ್ವಜನಿಕರಿಗೆ ಹೇಳುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು’ ಎಂದೂ ತಿಳಿಸಿದರು.

ADVERTISEMENT

ಹಗಲಿನಲ್ಲಿ ಮನೆ ಗುರುತು: ‘ಲಾರಿ ಚಾಲಕನಾಗಿದ್ದ ಸುನೀಲ್‌, ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಜೊತೆ ಸ್ನೇಹ ಬೆಳೆಸಿದ್ದ. ನಂತರ ಅವರಿಬ್ಬರೂ ಸೇರಿ ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ನಗರದ ಪ್ರಮುಖ ರಸ್ತೆಗಳಲ್ಲಿ ಹಗಲಿನಲ್ಲಿ ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದರು. ಅಂಥ ಮನೆಗಳಿಗೆ ರಾತ್ರಿ ಹೋಗಿ, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಕೃತ್ಯ ಎಸಗಿ ಪರಾರಿಯಾಗುತ್ತಿದ್ದರು.’

‘ಆರ್‌.ಟಿ.ನಗರದ ಸೀತಪ್ಪ ಲೇಔಟ್‌ನ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು, ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗಿದ್ದರು. ಸಂಜಯನಗರ ಹಾಗೂ ಕುಣಿಗಲ್‌ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.