ಬೆಂಗಳೂರು: ‘ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಜೀವ ಬೆದರಿಕೆಯೊಡ್ಡಿದ್ದಾನೆ’ ಎಂದು ಆರೋಪಿಸಿ ವಕೀಲ ಎಸ್. ಹುಸೇನ್ ಓವೈಸಿ ಎಂಬುವರು ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
‘ಇನ್ಫೆಂಟ್ರಿ ರಸ್ತೆಯಲ್ಲಿ ‘ಕೆಎಚ್ ಲಾ’ ಕಚೇರಿ ಹೊಂದಿರುವ ವಕೀಲ ಹುಸೇನ್ ಜೀವ ಬೆದರಿಕೆ ಬಗ್ಗೆ ದೂರು ನೀಡಿದ್ದರು. ಆರಂಭದಲ್ಲಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿತ್ತು. ಇದೀಗ ನ್ಯಾಯಾಲಯದ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಯಲಹಂಕದ ಚೊಕ್ಕನಹಳ್ಳಿಯಲ್ಲಿರುವ ಆಸ್ತಿ ಯೊಂದರ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಮ್ಮ ಕಕ್ಷಿದಾರರ ಪರವಾಗಿ ಹುಸೇನ್ ಅವರು ನ್ಯಾಯಾಲಯ ದಲ್ಲಿ ಮೊಕದ್ದಮೆ ಹೂಡಿದ್ದು, ವಿಚಾರಣೆ ನಡೆಯುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ. 9 ರಂದು ಹುಸೇನ್ ಅವರಿಗೆ ಕರೆ ಮಾಡಿದ್ದ ವ್ಯಕ್ತಿ, ‘ನಾನು ಶಾಸಕ ಜಮೀರ್ ಅಹ್ಮದ್ ಖಾನ್ ಕಡೆಯವನು. ವ್ಯಾಜ್ಯದ ಮೊಕದ್ದಮೆ ಹಿಂಪಡೆಯಬೇಕು. ಇಲ್ಲದಿದ್ದರೆ, ನಿನ್ನನ್ನು ಹಾಗೂ ನಿನ್ನ ಕುಟುಂಬದವರನ್ನು ಸುಮ್ಮನೇ ಬಿಡುವುದಿಲ್ಲ’ ಎಂದು ಬೆದರಿಸಿದ್ದ.'
‘ಮೊಬೈಲ್ ಸಂಭಾಷಣೆ ಸಮೇತ ಹುಸೇನ್ ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.