ಬಿಡಿಎ
ಬೆಂಗಳೂರು: ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ಕಡತಗಳಿಗೆ ಸಹಿ ಹಾಕುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಎನ್. ಜಯರಾಂ ಅವರಿಗೆ ಬೆದಿರಿಕೆ ಹಾಕಿದ ಆರೋಪದಡಿ ಶಿವಕುಮಾರ್ ಎಂಬುವವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಎಂಟು ತಿಂಗಳಿಂದ ಬಿಡಿಎ ಕೇಂದ್ರ ಕಚೇರಿಯಲ್ಲಿ ಆಯುಕ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಆಗಸ್ಟ್ 8ರಂದು ರಾತ್ರಿ 12 ಗಂಟೆಗೆ ಶಿವಕುಮಾರ್ ಎಂಬ ವ್ಯಕ್ತಿ ಕರೆ ಮಾಡಿದ್ದರು. ನಾನು ಕರೆ ಸ್ವೀಕರಿಸಲಿಲ್ಲ. ಆರೋಪಿ ವ್ಯಾಟ್ಸ್ಆ್ಯಪ್ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಿಡಿಎ ಕಚೇರಿಯಲ್ಲಿ ಬಾಕಿ ಇರುವ ನನ್ನ ಎಲ್ಲ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿಕೊಡಬೇಕು ಎಂದು ಬೆದರಿಕೆ ಹಾಕಿದ್ದಾನೆ ಎಂದು ಜಯರಾಂ ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.
‘ಆರೋಪಿ ಶಿವಕುಮಾರ್ ಬಿಡಿಎ ಕಚೇರಿಗೆ ತೆರಳಿ ಅಲ್ಲಿನ ಸಿಬ್ಬಂದಿಗೂ ಅವಾಚ್ಯವಾಗಿ ನಿಂದಿಸಿದ್ದಾನೆ. ಲೋಕಾಯುಕ್ತರ ಹೆಸರಿನಲ್ಲಿ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಕಡತಗಳಿಗೆ ಸಹಿ ಹಾಕುವಂತೆ ಬೆದರಿಸಿದ್ದಾನೆ. ಕಚೇರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದರು’ ಎಂದು ಮೂಲಗಳು ತಿಳಿಸಿವೆ.
‘ಆ.10ರಂದು ಆರೋಪಿಯನ್ನು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ‘ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.