ADVERTISEMENT

ಬೆಂಗಳೂರಿಗೆ ತಟ್ಟದ ಮುಷ್ಕರದ ಬಿಸಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 11:02 IST
Last Updated 8 ಜನವರಿ 2020, 11:02 IST
ನಗರದ ಟೌನ್‌ಹಾಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ
ನಗರದ ಟೌನ್‌ಹಾಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ   

ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಬಿಸಿ ನಗರಕ್ಕೆ ತಟ್ಟಿಲ್ಲ. ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿವೆ. ಶಾಲಾ- ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ಎಲ್ಲ ಕಡೆ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿವೆ. ಜನ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ.

ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಂದಿನಂತೆ ಓಡಾಡುತ್ತಿದೆ. ಆಟೊ ಓಡಾಟ ಕೂಡಾ ಎಂದಿನಂತೆ ಇದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸಹಜ ಸ್ಥಿತಿ ಇದ್ದು, ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆ.ಆರ್. ಮಾರುಕಟ್ಟೆಯಲ್ಲಿ ಪೊಲೀಸ್ ಹಾಗೂ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಮುಷ್ಕರ ವಿರೋಧಿಸಿ ಕರುನಾಡ ಸಂಘಟನೆಯಿಂದ‌ ಕೆ.ಆರ್. ಮಾರುಕಟ್ಟೆಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಯಿತು. ಗ್ರಾಹಕರಿಗೆ ಹಾಗೂ ವ್ಯಾಪಾರಿಗಳಿಗೆ ಗುಲಾಬಿ ನೀಡಿ ಮುಷ್ಕರಕ್ಕೆ ಸಂಘಟನೆ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ನಗರದ ಟೌನ್‌ಹಾಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ. ಭದ್ರತೆಗೆ ಎರಡು ಕೆಎಸ್ಆರ್‌ಪಿ ತುಕಡಿ, ಒಂದು ಸಿಎಆರ್ ಮತ್ತು ಒಂದು ವಾಟರ್ ಜೆಟ್ ನಿಯೋಜಿಸಲಾಗಿದೆ. ಇಲ್ಲಿ ಭದ್ರತೆಗೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.