ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಮಗ ಮೃತಪಟ್ಟ ವಿಚಾರ ಕೇಳಿ, ಆಘಾತಗೊಂಡು ಆಸ್ಪತ್ರೆಯಿಂದ ಹೊರ ಬಂದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಲೀಲಾವತಿ(45) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಮೋಹನ್ ಗೌಡ (20) ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಮೃತಪಟ್ಟ ಮಗ.
‘ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಮೋಹನ್,ಬೈಕ್ ವಿಚಾರಕ್ಕೆ ತನ್ನ ಸ್ನೇಹಿತರೊಂದಿಗೆ ಜಗಳ ಮಾಡಿಕೊಂಡಿದ್ದ. ಬಳಿಕ ಮನೆಗೆ ಬಂದು ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ’ ಎಂದು ಪೊಲೀಸರು ತಿಳಿಸಿದರು.
‘ಮನೋಜ್ ಸ್ನೇಹಿತರು ಮನೆಯ ಹೊರಗೆ ಬಂದು ಗಲಾಟೆ ಮಾಡುತ್ತಿರುವುದನ್ನು ಅವರ ತಂದೆ ಪೊಲೀಸರಿಗೆ ತಿಳಿಸಿದ್ದರು. ಮನೋಜ್ ಕೋಣೆಯ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಪೋಷಕರು ಪೊಲೀಸರ ಸಹಾಯದಿಂದ ಬಾಗಿಲು ತೆರೆದು ನೋಡಿದಾಗ, ಮನೋಜ್ ನೇಣು ಬಿಗಿದ ಸ್ಥಿತಿಯಲ್ಲಿದ್ದ. ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಮನೋಜ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು’ ಎಂದು ವಿವರಿಸಿದರು.
‘ಮಗ ಮೃತಪಟ್ಟ ವಿಚಾರದಿಂದ ಆಘಾತಗೊಂಡಿದ್ದ ತಾಯಿ ಲೀಲಾವತಿ ಆಸ್ಪತ್ರೆಯಿಂದ ಹೊರಬಂದಿದ್ದರು. ರಸ್ತೆಗೆ ಬಂದ ಕೂಡಲೇ ವಾಹನಕ್ಕೆ ಡಿಕ್ಕಿ ಹೊಡೆದು ಅವರೂ ಮೃತಪಟ್ಟಿದ್ದಾರೆ. ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದೆ’ ಎಂದು ಮೂಲಗಳು ತಿಳಿಸಿವೆ.
ಮನೋಜ್ ಆತ್ಮಹತ್ಯೆ ಸಂಬಂಧ ವಿಜಯನಗರ ಠಾಣೆ ಹಾಗೂ ತಾಯಿ ಲೀಲಾವತಿ ಅಪಘಾತ ಸಂಬಂಧ ವಿಜಯನಗರ ಸಂಚಾರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.