ಬೆಂಗಳೂರು: ರಾಜ್ಯ ಸರ್ಕಾರ ವಿಳಂಬ ಮಾಡದೆ ಕೂಡಲೇ ತ್ರಿಪಕ್ಷೀಯ ಸಭೆ ಕರೆದು ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗ್ರಹಿಸಿದೆ.
ಈ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಂಬಂಧ ಪತ್ರ ಬರೆದಿರುವ ಕ್ರಿಯಾ ಸಮಿತಿ ಸಂಚಾಲಕ ಬಿ.ಜಯದೇವರಾಜೇ ಅರಸು, ‘ಏಪ್ರಿಲ್ 15ರಂದು ನಡೆದ ಜಂಟಿ ಕ್ರಿಯಾ ಸಮಿತಿ ಪ್ರತಿನಿಧಿಗಳ ತ್ರಿಪಕ್ಷೀಯ ಸಭೆಯಲ್ಲಿ ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿತ್ತು. ಕಳೆದ ವರ್ಷ ಡಿಸೆಂಬರ್ 31ರಂದು ಮುಷ್ಕರ ನಡೆಸುವುದಾಗಿ ನೋಟಿಸ್ ನೀಡಲಾಗಿತ್ತು. ಆದರೆ, ಇನ್ನೂ ಬೇಡಿಕೆ ಈಡೇರಿಲ್ಲ. ಹಾಗಾಗಿ ಮುಷ್ಕರ ನಡೆಸುವ ಕುರಿತು ಚಿಂತನೆ ನಡೆದಿದೆ’ ಎಂದು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರನ್ನು ಭೇಟಿ ಮಾಡಿ, ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಸರ್ಕಾರ ಕೂಡಲೇ ಬೇಡಿಕೆ ಈಡೇರಿಕೆ ಕುರಿತು ತ್ರಿಪಕ್ಷೀಯ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಕ್ಕೆ ಸಂಘಟನೆಗಳ ಪ್ರತಿನಿಧಿಗಳಾದ ಎಚ್.ವಿ.ಅನಂತ ಸುಬ್ಬರಾವ್, ಎಚ್.ಡಿ.ರೇವಪ್ಪ, ವೆಂಕಟರಮಣಪ್ಪ, ಎ.ಸೋಮಣ್ಣ, ಕೆ.ಆರ್.ಜಗದೀಶ್ ಸಹಿ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.