ADVERTISEMENT

ಟ್ರಾಮಾ ಸೆಂಟರ್‌ ಮಾರ್ಚ್‌ನಲ್ಲಿ ಲೋಕಾರ್ಪಣೆ: ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 23:30 IST
Last Updated 21 ಜನವರಿ 2026, 23:30 IST
ಮಲ್ಲೇಶ್ವರದ ಕೆ.ಸಿ. ಜನರಲ್‌ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಭೇಟಿ ನೀಡಿ ಮಾಹಿತಿ ಪಡೆದರು.
ಮಲ್ಲೇಶ್ವರದ ಕೆ.ಸಿ. ಜನರಲ್‌ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಭೇಟಿ ನೀಡಿ ಮಾಹಿತಿ ಪಡೆದರು.   

ಬೆಂಗಳೂರು: ‘ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ನಿರ್ಮಿಸಿರುವ ಟ್ರಾಮಾ ಕೇರ್ ಸೆಂಟರ್ ಮಾರ್ಚ್ ತಿಂಗಳಲ್ಲಿ ಪ್ರಾರಂಭವಾಗಲಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲನೆ, ಸಮಸ್ಯೆ ಆಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬೆಂಗಳೂರು ಉತ್ತರ ಭಾಗ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಟ್ರಾಮಾ ಸೆಂಟರ್‌ ನಿರ್ಮಿಸಲಾಗಿದೆ. 50 ಹಾಸಿಗೆಯ ಸೌಲಭ್ಯದ ಸೆಂಟರ್‌ನಲ್ಲಿ 14 ಎಚ್‌ಡಿಯು ಹಾಸಿಗೆ, 15 ಐಸಿಯು, 2 ಶಸ್ತ್ರಚಿಕಿತ್ಸೆ ಕೊಠಡಿಯ ಸೌಲಭ್ಯ ಇರಲಿದೆ. ಬ್ಲಡ್ ಬ್ಯಾಂಕ್, ಡಿಎನ್‌ಬಿ ಅಧ್ಯಯನಕ್ಕಾಗಿ ನೂತನ ಕಟ್ಟಡ ಸಿದ್ದವಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ತಾಯಿ–ಮಕ್ಕಳ ಆಸ್ಪತ್ರೆಯು ಸುಸಜ್ಜಿತ ಕಟ್ಟಡದಲ್ಲಿ ಡಿಸೆಂಬರ್ ವೇಳೆಗೆ ಲೋಕಾರ್ಪಣೆ ಆಗಲಿದೆ. ಆಸ್ಪತ್ರೆ ಸಿಬ್ಬಂದಿ ಕೊರತೆ ನೀಗಿಸಲಾಗುವುದು. ಅಗತ್ಯ ಬಿದ್ದರೆ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುತ್ತೇವೆ’ ಎಂದರು.

ಆಸ್ಪತ್ರೆಯ ಆವರಣದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಕೇಂದ್ರ, ಮಕ್ಕಳ ಐಸಿಯು ಕೇಂದ್ರ, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ದಿನೇಶ್‌ ಗುಂಡೂರಾವ್‌ ಭೇಟಿ ನೀಡಿ, ರೋಗಿಗಳಿಂದ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.