ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ಗ್ರಾಮ ಸಹಾಯಕರ ಕೇಂದ್ರ ಸಂಘ ಒತ್ತಾಯಿಸಿದೆ.
‘ರಾಜ್ಯದಾದ್ಯಂತ 10,450 ಜನ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ₹13 ಸಾವಿರ ವೇತನ ನೀಡಲಾಗುತ್ತಿದೆ. ಸೇವಾ ಭದ್ರತೆಯನ್ನು ಒದಗಿಸಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಆರೋಗ್ಯ ಭದ್ರತೆಯನ್ನೂ ಕಲ್ಪಿಸಿಲ್ಲ. ಕಡಿಮೆ ಗೌರವಧನದಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಚುನಾವಣೆಗಳ ವೇಳೆ ಹೆಚ್ಚಿನ ಕೆಲಸ ಮಾಡಿಸುತ್ತಾರೆ. ರಾತ್ರಿ ವೇಳೆಯೂ ಕೆಲಸ ಮಾಡಿಸಲಾಗುತ್ತಿದೆ. ಆದರೆ, ಅದಕ್ಕೆ ತಕ್ಕಂತೆ ಸೌಲಭ್ಯ ಸಿಗುತ್ತಿಲ್ಲ. ಬೆಲೆ ಏರಿಕೆಯ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್ ದೇವರಾಜು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಗ್ರಾಮ ಸಹಾಯಕರಲ್ಲಿ ಬಹುತೇಕರು ವಿದ್ಯಾವಂತರಾಗಿದ್ದು, ವಿದ್ಯಗೆ ತಕ್ಕಂತಹ ಹುದ್ದೆ ಮತ್ತು ವೇತನ ಶ್ರೇಣಿಯನ್ನು ಸರ್ಕಾರ ನಿಗದಿಪಡಿಸಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಬೇಡಿಕೆಗಳು ಈಡೇರಿಲ್ಲ. ಮುಂಬರುವ ಬಜೆಟ್ನಲ್ಲಿ ನಮಗೆ ಸೇವಾ ಭದ್ರತೆಯ ಜೊತೆಗೆ ಡಿ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು. ಇದನ್ನು ಬಜೆಟ್ ಮಂಡನೆಗೂ ಮುನ್ನವೇ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.