ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಗ್ರಾಮಾಂತರ ವ್ಯಾಪ್ತಿಯ ಇನ್ನೂ ಎರಡು ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.
ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಹಾಗೂ ದೊಡ್ಡಬಳ್ಳಾಪುರ ಉಪ ವಿಭಾಗದ ರಾಜಾನುಕುಂಟೆ ಪೊಲೀಸ್ ಠಾಣೆಗಳನ್ನು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಈ ಎರಡೂ ಠಾಣೆಗಳನ್ನು ವಾಯವ್ಯ (ಪೀಣ್ಯ) ಉಪ ವಿಭಾಗಕ್ಕೆ ಸೇರ್ಪಡೆ ಮಾಡಲಾಗಿದೆ.
ಈ ಹಿಂದೆ ಹೊರವಲಯದ ಕೆಲವು ಠಾಣೆಗಳನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡುವಾಗ ಈ ಎರಡೂ ಠಾಣೆಗಳನ್ನು ಕೈಬಿಡಲಾಗಿತ್ತು. ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳನ್ನು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಕಳೆದ ಆಗಸ್ಟ್ನಲ್ಲಿ ಪ್ರಸ್ತಾವ ಸಲ್ಲಿಸಿದ್ದರು.
ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ 40 ಹಳ್ಳಿಗಳು ಈಗಾಗಲೇ ಕಮಿಷನರೇಟ್ ವ್ಯಾಪ್ತಿಯಲ್ಲಿವೆ. ಹೊರವಲಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳಿಗೆ ಕಡಿವಾಣ ಹಾಕಲು ಈ ಠಾಣೆಗಳನ್ನು ಕಮಿಷನರೇಟ್ ವ್ಯಾಪ್ತಿಗೆ ಸೇರಿಸಬೇಕು ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಲಾಗಿತ್ತು.
ರಾಜಾನುಕುಂಟೆ ಠಾಣೆ ವ್ಯಾಪ್ತಿಯಲ್ಲಿ ಕಾಲೇಜುಗಳು ಹೆಚ್ಚಿವೆ. ವಿದೇಶಿ ಪ್ರಜೆಗಳು ಹೆಚ್ಚಾಗಿ ವಾಸ ಮಾಡುತ್ತಿದ್ದು, ಮನೆಗಳ್ಳತನ ಮತ್ತು ಡ್ರಗ್ಸ್ ಮಾರಾಟ ದಂಧೆಯೂ ನಡೆಯುತ್ತಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಜನದಟ್ಟಣೆ, ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳು, ವಸತಿ ಸಮುಚ್ಚಯಗಳಿವೆ. ಈ ಠಾಣೆಯನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡಿದರೆ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ತ್ವರಿತವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಅನುಕೂಲ ಆಗಲಿದೆ ಎಂದೂ ಪ್ರಸ್ತಾವದಲ್ಲಿ ಕೋರಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.