ADVERTISEMENT

ಬೈಕ್ ಕಳ್ಳತನ: ರಾಮಾಚಾರಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಮೇ 2022, 19:30 IST
Last Updated 20 ಮೇ 2022, 19:30 IST
ಆರೋಪಿಯಿಂದ ಜಪ್ತಿ ಮಾಡಲಾದ ಬೈಕ್‌ಗಳನ್ನು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಪರಿಶೀಲಿಸಿದರು
ಆರೋಪಿಯಿಂದ ಜಪ್ತಿ ಮಾಡಲಾದ ಬೈಕ್‌ಗಳನ್ನು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಪರಿಶೀಲಿಸಿದರು   

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಆನಂದ್ ಅಲಿಯಾಸ್ ರಾಮಾಚಾರಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

‘ಮೈಸೂರು ರಸ್ತೆಯ ಬಾಪೂಜಿನಗರ ನಿವಾಸಿ ಆನಂದ್, ಈ ಹಿಂದೆಯೂ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ. ಆತನಿಂದ ₹ 12 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ಕಳುವಾದ ಬಗ್ಗೆ ದೂರುಗಳು ಬಂದಿದ್ದವು. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿತ್ತು. ಮೇ 18ರಂದು ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಆರೋಪಿ ಆನಂದ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.

ADVERTISEMENT

‘ಬ್ಯಾಟರಾಯನಪುರ, ಜ್ಞಾನಭಾರತಿ, ಚಂದ್ರಾ ಲೇಔಟ್, ರಾಜಾಜಿನಗರ, ಪುಟ್ಟೇನಹಳ್ಳಿ, ಅಶೋಕನಗರ, ಬ್ಯಾಡರಹಳ್ಳಿ, ಜಗಜೀವನ್‌ರಾಮ್ ನಗರ, ಸಂಪಿಗೆಹಳ್ಳಿ, ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ವಾಹನ ಕಳ್ಳತನ ಮಾಡಿದ್ದ. 20 ವಾಹನಗಳ ಪೈಕಿ 11 ವಾಹನಗಳ ಮಾಲೀಕರು ಪತ್ತೆಯಾಗಿದ್ದಾರೆ. ಇನ್ನುಳಿದ 9 ವಾಹನಗಳ ಮಾಲೀಕರನ್ನು ಹುಡುಕುತ್ತಿದ್ದೇವೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.