ಬೆಂಗಳೂರು: ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಿದ್ದ 28 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
‘ಬ್ಯಾನರ್ ತೆರವು ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಜುಲೈ 26ರಿಂದ ಈವರೆಗೆ 2,519 ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಬಿಬಿಎಂಪಿ ಎಚ್ಚರಿಕೆ ನೀಡಿದರೂ ಫ್ಲೆಕ್ಸ್ ಅಳವಡಿಕೆ ಮಾಡುವುದು ಹೆಚ್ಚಾಗುತ್ತಿದ್ದು, ತೆರವುಗೊಳಿಸುವುದೇ ಕೆಲಸವಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಜತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ತೆರವಿಗೆ ತಗುಲುವ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಲಾಗುವುದು’ ಎಂದರು.
ಈದ್ಗಾ ವಿವಾದ ಶೀಘ್ರ ಇತ್ಯರ್ಥ: ‘ಚಾಮರಾಜಪೇಟೆ ಈದ್ಗಾ ಮೈದಾನದ ಒಡೆತನ ವಿವಾದದಲ್ಲಿ ಖಾತೆ ಬದಲಾವಣೆ ಕೋರಿ ವಕ್ಫ್ ಮಂಡಳಿ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ಸಕ್ಷಮ ಅಧಿಕಾರಿಯಾದ ಪಶ್ಚಿಮ ವಲಯ ಜಂಟಿ ಆಯುಕ್ತರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ತುಷಾರ್ ಗಿರಿನಾಥ್ ಹೇಳಿದರು.
‘ಮೈದಾನ ಜಾಗದ ಒಡೆತನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಾಲಿಕೆಗೆ ನಿರ್ಬಂಧ ಆದೇಶ ಹೊರಡಿಸಿದೆ. ಹಾಗಾಗಿ, ಯಾವುದೇ ಸಭೆ, ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಅಧಿಕಾರ ಪಾಲಿಕೆಗೆ ಇಲ್ಲ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಬಹುದು. ಧ್ವಜಾರೋಹಣಕ್ಕೆ ಯಾವುದೇ ನಿರ್ಬಂಧ ಇಲ್ಲ’ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.