ADVERTISEMENT

‘ಶಾಲೆ ದತ್ತು ಪಡೆಯಲು ವಿ.ವಿಗಳ ಆಸಕ್ತಿ’

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್‌

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 20:11 IST
Last Updated 27 ನವೆಂಬರ್ 2020, 20:11 IST
ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹5 ಲಕ್ಷಗಳ ದೇಣಿಗೆಯನ್ನು ಬಿಜೆಪಿ ಮುಖಂಡ ರಾಜಣ್ಣ ಅವರು ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ನೀಡಿದರು. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.
ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹5 ಲಕ್ಷಗಳ ದೇಣಿಗೆಯನ್ನು ಬಿಜೆಪಿ ಮುಖಂಡ ರಾಜಣ್ಣ ಅವರು ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ನೀಡಿದರು. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.   

ಹೆಸರಘಟ್ಟ: ‘ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಚಿವರು, ಸಂಸದರು ತಮ್ಮ ಕ್ಷೇತ್ರದಲ್ಲಿರುವ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ದಿಪಡಿಸಲು ಒಪ್ಪಿಗೆ ನೀಡಿದ್ದಾರೆ. ವಿಶ್ವವಿದ್ಯಾಲಯಗಳು ಕೂಡ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲು ಮುಂದೆ ಬಂದಿವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ರಾಜಾನುಕುಂಟೆ ಗ್ರಾಮದಲ್ಲಿ ಪದವಿಪೂರ್ವ ಕಾಲೇಜನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

‘ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಮುಂದೆ ಕ್ಯೂ ನಿಂತು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲೆ ಮಾಡಬೇಕು. ಅಂತಹ ಕನಸು ನನ್ನದಾಗಿದೆ. ಆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದ್ದು, ನನ್ನ ಕನಸು ನನಸಾಗುತ್ತದೆ. ಕೂಲಿ ಕಾರ್ಮಿಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗ ಕಳುಹಿಸುತ್ತಿದ್ದಾರೆ. ತಮ್ಮ ದುಡಿಮೆಯ ಶೇಕಡ 20ರಷ್ಟು ಆದಾಯವನ್ನು ಮಕ್ಕಳ ಶಿಕ್ಷಣಕ್ಕಾಗಿ ವೆಚ್ಚ ಮಾಡುತ್ತಿದ್ದಾರೆ. ಇದು ತಪ್ಪಬೇಕು’ ಎಂದು ಹೇಳಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ,‘ಯಲಹಂಕ ಕ್ಷೇತ್ರಕ್ಕೆ ಎರಡು ಕಾಲೇಜುಗಳನ್ನು ಸರ್ಕಾರ ಮಂಜೂರು ಮಾಡಿದೆ. ಮುಂದಿನ ವರ್ಷ ಮಾಕಳಿಯಲ್ಲಿ ಪದವಿಪೂರ್ವ ಕಾಲೇಜು ಪ್ರಾರಂಭಗೊಳ್ಳಲಿದೆ. ರಾಜಾನುಕುಂಟೆಯಲ್ಲಿ ಪದವಿ ಕಾಲೇಜನ್ನು ಪ್ರಾರಂಭಿಸಲಾಗುವುದು’ ಎಂದರು.

ಕಾಲೇಜಿಗಾಗಿ ಇನ್ನೂ 4 ಎಕರೆ ಜಮೀನನ್ನು ಮಂಜೂರು ಮಾಡಲಾಗುವುದು. ಮುಂದಿನ ವರ್ಷದೊಳಗೆ ಅಗತ್ಯವಿರುವ ಕಟ್ಟಡಗಳನ್ನು ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪನಿರ್ದೇಶಕ ಶ್ರೀರಾಮ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉತ್ತರ ಜಿಲ್ಲಾ ಉಪನಿರ್ದೇಶಕ ನಾರಾಯಣ್, ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ್, ಮುಖಂಡರಾದ ಮಂಜುನಾಥರೆಡ್ಡಿ, ಎಂ.ಮೋಹನ್ ಕುಮಾರ್, ತಿಮ್ಮಾರೆಡ್ಡಿ, ಹನುಮಯ್ಯ, ರಾಜೇಂದ್ರಕುಮಾರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.