
ಬೆಂಗಳೂರು: ವೆನೆಜುವೆಲಾ ಮೇಲಿನ ಅಮೆರಿಕದ ಸಾಮ್ರಾಜ್ಯಶಾಹಿ ಮಿಲಿಟರಿ ದಾಳಿ ಖಂಡಿಸಿ ಎಡಪಕ್ಷಗಳ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ವೆನೆಜುವೆಲಾದಲ್ಲಿರುವ ತೈಲ ನಿಕ್ಷೇಪಗಳನ್ನು ವಶಪಡಿಸಿಕೊಳ್ಳುವುದಾಗಿ ಹೇಳಿದ್ದಾರೆ. ಮಾದಕ ದ್ರವ್ಯ-ಭಯೋತ್ಪಾದನೆ ಪಿತೂರಿ ಹೆಸರಿನಲ್ಲಿ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡೂರೊ ಹಾಗೂ ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಪಹರಣ ಮಾಡಿರುವುದು ಖಂಡನೀಯ’ ಎಂದು ಪ್ರತಿಭಟನಕಾರರು ಹೇಳಿದರು.
‘ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕ್ ರುಬಿಯೊ ಅವರು ಕ್ಯೂಬಾ ಹಾಗೂ ಮೆಕ್ಸಿಕೊ ಮುಂದಿನ ಗುರಿಯಾಗಿವೆ ಎಂದು ಎಚ್ಚರಿಕೆ ನೀಡಿರುವುದು ಸರಿಯಲ್ಲ. ಅಮೆರಿಕದ ರಾಷ್ಟ್ರೀಯ ಭದ್ರತಾ ರಣನೀತಿ–2025 ಬಿಡುಗಡೆ ಆದ ಕೆಲ ದಿನಗಳ ನಂತರ ಅಲ್ಲಿನ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಮೆರಿಕದ ಸಾಮ್ರಾಜ್ಯಶಾಹಿ ಇಡೀ ಪ್ರಪಂಚದ ಮೇಲೆ ತನ್ನ ಪ್ರಾಬಲ್ಯವನ್ನು ಹೇರುವ ಪ್ರಯತ್ನದಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲು ಸಜ್ಜಾಗುತ್ತಿದೆ’ ಎಂದರು.
‘ವೆನೆಜುವೆಲಾದ ಮೇಲೆ ಯುದ್ಧ ಬೇಡ ಮತ್ತು ಅಲ್ಲಿನ ಅಧ್ಯಕ್ಷ ಮಡೂರೊ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಕೇಂದ್ರ ಸರ್ಕಾರವು ಅಮೆರಿಕದ ಆಕ್ರಮಣವನ್ನು ಖಂಡಿಸುವ ಮೂಲಕ ವೆನೆಜುವೆಲಾದ ಪರವಾಗಿ ದೃಢವಾಗಿ ನಿಲ್ಲಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.