ಯಲಹಂಕ: ಜಾಲ ಹೋಬಳಿ ಬಿಲ್ಲಮಾರನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮದ ಆಂಜನೇಯ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು. ನಂತರ ವಾಲ್ಮೀಕಿ ಮತ್ತು ದಿವಂಗತ ನಟ ಪುನೀತ್ ರಾಜಕುಮಾರ್ ಭಾವಚಿತ್ರ ಹಾಗೂ ಆಂಜನೇಯ ಸ್ವಾಮಿಯ ವಿಗ್ರಹವನ್ನು ಬೆಳ್ಳಿರಥದಲ್ಲಿ ಕೂರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಕೀಲುಕುದುರೆ, ಬ್ಯಾಂಡ್ ಮತ್ತು ವಾದ್ಯತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಎನ್.ಕೆ. ಮಹೇಶ್ ಕುಮಾರ್, ‘ಸರ್ಕಾರ ಮೂರು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ-ವರ್ಗಗಳಿಗೆ ಮೀಸಲಾತಿ ಹೆಚ್ಚಿಸುವುದಾಗಿ ಮಾತು ನೀಡಿದ್ದರೂ ಇದುವರೆಗೂ ಈಡೇರಿರಲಿಲ್ಲ. ಈ ವಿಚಾರವಾಗಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀಗಳು 241 ದಿನಗಳ ಕಾಲ ಸತ್ಯಾಗ್ರಹ ನಡೆಸಿ, ಸರ್ಕಾರದ ಗಮನ ಸೆಳೆದಿದ್ದರು. ಸರ್ಕಾರ ಈಗ ಮೀಸಲಾತಿ ಹೆಚ್ಚಿಸಿದ್ದು, ಇದಕ್ಕಾಗಿ ಸ್ವಾಮೀಜಿ ಮತ್ತು ಸರ್ಕಾರಕ್ಕೆ ಸಮುದಾಯದ ಪರವಾಗಿ
ಧನ್ಯವಾದಗಳನ್ನು ಅರ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.
ಜಯಂತಿ ಅಂಗವಾಗಿ ವಾಲಿಬಾಲ್, ರಂಗೋಲಿ, ಹಗ್ಗ-ಜಗ್ಗಾಟ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.