
ಬೆಂಗಳೂರು: ‘ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಎಲ್ಲರೂ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ವಂದೇ ಮಾತರಂ ಗೀತೆ ರಚನೆಯ 150ನೇ ವರ್ಷಾಚರಣೆಯ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಗಾಯನ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ರಾಷ್ಟ್ರಗೀತೆ ವಂದೇ ಮಾತರಂ, ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿತ್ತು. ದೇಶದ ಪ್ರತಿಯೊಬ್ಬ ಸ್ವಾಭಿಮಾನಿ ದೇಶಭಕ್ತರೂ ವಂದೇ ಮಾತರಂ ಅನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. 2047ರ ವೇಳೆಗೆ ಶಕ್ತಿಯುತ ಭಾರತವನ್ನು ನಿರ್ಮಿಸಲು ಈ ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದರು.
ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಸಿ.ಎನ್.ಅಶ್ವತ್ಥನಾರಾಯಣ್ ಅವರು ವಂದೇ ಮಾತರಂ ಸಾಮೂಹಿಕ ಗಾಯನದಲ್ಲಿ ದನಿಗೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.