ಬೆಂಗಳೂರು: ‘ವೀರಶೈವ ಲಿಂಗಾಯತ ಗುರುಗಳು ಸಮುದಾಯಕ್ಕೆ ಧರ್ಮ ಬೋಧನೆ ಮಾಡುವಲ್ಲಿ ವಿಫಲವಾಗಿದ್ದಾರೆ. ಇದರಿಂದ ಈಗಿನ ಯುವಜನಾಂಗಕ್ಕೆ ತಮ್ಮ ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಅರಿವು ಕಡಿಮೆ ಆಗುತ್ತಿದೆ’ ಎಂದುವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅಖಿಲಭಾರತ ವೀರಶೈವ ಮಹಾಸಭಾ ವತಿಯಿಂದ ಭಾನುವಾರ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರಾಜಕೀಯ ನಾಯಕರು ವೀರಶೈವ-ಲಿಂಗಾಯತ ಸಮುದಾಯವನ್ನು ಇಬ್ಭಾಗ ಮಾಡಲು ಪ್ರಯತ್ನಿಸಿ ಕೈ ಸುಟ್ಟುಕೊಂಡರು. ಮಠಾ
ಧೀಶರು ಕಾರ್ಪೊರೇಟ್ ಸಂಸ್ಥೆಗಳ ರೀತಿಕಾಲೇಜುಗಳನ್ನು ನಿರ್ಮಿಸಿ ಸಿಇಒಗಳಾಗಿ ಬದಲಾಗಿದ್ದಾರೆ. ಇದರಿಂದ ಹೆಚ್ಚಿನ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ. ಆದರೆ, ತಮ್ಮ ಧರ್ಮದ ಬಗ್ಗೆ ಮಕ್ಕಳಲ್ಲಿ ಅರಿವಿನ ಮಟ್ಟ ಹೆಚ್ಚಿಸುವಲ್ಲಿ ವಿಫಲರಾಗಿದ್ದಾರೆ’ ಎಂದರು.
ಶಾಸಕ ಶಾಮನೂರು ಶಿವಶಂಕರಪ್ಪ, ‘ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಹೆಸರಿನಲ್ಲಿ ಅಲ್ಪ ಮೊತ್ತ ನೀಡಲಾಗುವುದು. ಆದರೆ, ಅದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಷ್ಟರಮಟ್ಟಿಗೆ ಸಹಕಾರಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಹಾಗೂ ಪೂರ್ಣ ಶುಲ್ಕ ಭರಿಸುವ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.