ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಸಂಶೋಧಕರಾದ ಮೈಸೂರಿನ ಬಿ.ಎಸ್.ಪ್ರಣತಾರ್ತಿಹರನ್ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದ್ದು, ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ವಿದ್ವಾಂಸರಾದ ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರ ಅಭಿಮಾನಿಗಳು ಮತ್ತು ಬಂಧುಗಳು ಈ ದತ್ತಿ ನಿಧಿ ಸ್ಥಾಪಿಸಿದ್ದಾರೆ. ಹಳಗನ್ನಡ ಸಾಹಿತ್ಯ, ಛಂದಸ್ಸು, ನಿಘಂಟು ರಚನೆ, ಗ್ರಂಥ ಸಂಪಾದನೆ, ಅನುವಾದ, ಭಾಷಾಶಾಸ್ತ್ರ ಮೊದಲಾದ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.
ಪ್ರಣತಾರ್ತಿಹರನ್ ಅವರು ಬಾನುಲಿ ಕೇಂದ್ರದಲ್ಲಿ ಎಂಟು ವರ್ಷ, ಬಳಿಕ ಅಧ್ಯಾಪಕರು ಹಾಗೂ ಪ್ರಾಧ್ಯಾಪಕರಾಗಿ 25 ವರ್ಷ ಕಾರ್ಯನಿರ್ವಹಿಸಿದ್ದಾರೆ. ಸಂಕೇತಿ ಸಮುದಾಯದ ಅಧ್ಯಯನಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಸಂಕೇತಿ ಸಮುದಾಯವನ್ನೇ ಕೇಂದ್ರವಾಗಿಸಿಕೊಂಡು ಕೃತಿಗಳನ್ನೂ ರಚಿಸಿದ್ದಾರೆ. ಅವರ ಸಂಶೋಧನೆ ಮತ್ತು ಸಂಪಾದನೆಯ 40 ಕೃತಿಗಳು 10 ಸಂಪುಟಗಳಲ್ಲಿ ಪ್ರಕಟಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.