ADVERTISEMENT

ಆರೋಗ್ಯ ವಿಷನ್ ಶೀಘ್ರದಲ್ಲೇ ಅನುಷ್ಠಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 20:50 IST
Last Updated 10 ಅಕ್ಟೋಬರ್ 2021, 20:50 IST
ಇನ್‌ಸ್ಟಿಟ್ಯೂಟ್‌ ಆಫ್ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್‌ ಆಸ್ಪತ್ರೆಯನ್ನು ಮನ್‌ಸುಖ್‌ ಮಾಂಡವೀಯ ಉದ್ಘಾಟಿಸಿದರು. (ಎಡದಿಂದ) ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇದ್ದರು -ಪ್ರಜಾವಾಣಿ ಚಿತ್ರ
ಇನ್‌ಸ್ಟಿಟ್ಯೂಟ್‌ ಆಫ್ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್‌ ಆಸ್ಪತ್ರೆಯನ್ನು ಮನ್‌ಸುಖ್‌ ಮಾಂಡವೀಯ ಉದ್ಘಾಟಿಸಿದರು. (ಎಡದಿಂದ) ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇದ್ದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದ ಸಮಗ್ರ ಸುಧಾರಣೆಗೆ ಆರೋಗ್ಯ ವಿಷನ್ (ಮುನ್ನೋಟ) ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿಯೇ ಇದನ್ನು ಅನುಷ್ಠಾನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸ್ವಸ್ತಿಕ್ಸ್ ಸಮೂಹದ ಸಹಕಾರದಲ್ಲಿ ರಾಜ್ಯ ಸರ್ಕಾರವುವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಇನ್‌ಸ್ಟಿಟ್ಯೂಟ್‌ ಆಫ್ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್‌ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ವಿಷನ್ ರೂಪಿಸಲಾಗಿದೆ.ಎಲ್ಲರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಒದಗಿಸಲು ಸರ್ಕಾರ ಶ್ರಮಿಸುತ್ತಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂಬಡತನ ರೇಖೆಗಿಂತ ಕೆಳಗಿರುವ ರೋಗಿಗಳಿಗೆ ಈ ಆಸ್ಪತ್ರೆಯಲ್ಲಿ ಉಚಿತ ಅಂಗಾಂಗ ಕಸಿ ಚಿಕಿತ್ಸೆ ದೊರೆಯಲಿದೆ’ ಎಂದು ಹೇಳಿದರು.

ADVERTISEMENT

‘ಪಾಶ್ಚಾತ್ಯ ಆಹಾರ ಪದ್ಧತಿ, ಬದಲಾದ ಜೀವಶೈಲಿಯಿಂದಾಗಿಗ್ಯಾಸ್ಟ್ರೋಎಂಟರಾಲಜಿ (ಉದರ ಸಂಬಂಧಿ) ರೋಗಗಳಿಗೆ ಒಳಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾಯಿಲೆಗಳ ಚಿಕಿತ್ಸೆಗೆ ನೂತನ ಆಸ್ಪತ್ರೆಯು ಸಹಕಾರಿಯಾಗಲಿದೆ. ಅದೇ ರೀತಿ, ಅಂಗಾಂಗ ಕಸಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಹಾಗಾಗಿ, ಅಂಗಾಂಗ ಕಸಿಗೂ ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ, ‘ದೇಶದ ನಾಗರಿಕರು ಸ್ವಸ್ಥರಾಗಿದ್ದರೆ ದೇಶ ಸ್ವಸ್ಥವಾಗಿರುತ್ತದೆ. ಸ್ವಸ್ಥ ಸಮಾಜ ದೇಶದ ಅಭಿವೃದ್ಧಿಗೆ ಸಹಕಾರಿ. ಹಾಗಾಗಿ,ಬಡವರ ಆರೋಗ್ಯದ ಹಿತದೃಷ್ಟಿಯಿಂದ ಅಂತ್ಯೋದಯ ಆಧಾರದಲ್ಲಿ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಯು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪಬೇಕು. ಯಕೃತ್ತು ಕಸಿಯು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ. ಇದನ್ನು ರಾಜ್ಯ ಸರ್ಕಾರವು ಬಡ ರೋಗಿಗಳಿಗೆ ಉಚಿತವಾಗಿ ಒದಗಿಸಲು ಮುಂದಾಗಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.